ರಾಜ್ಯ ರಾಜಕೀಯದಲ್ಲಿ ಸಂಪುಟ ಪುನಾರಚನೆ ಚರ್ಚೆ ಮತ್ತೊಮ್ಮೆ ತೀವ್ರಗೊಂಡಿದ್ದು, ಆಕಾಂಕ್ಷಿ ಶಾಸಕರು ಲಾಬಿ ಆರಂಭಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 15ರಂದು ದೆಹಲಿಗೆ ತೆರಳಲಿರುವ ಹಿನ್ನೆಲೆಯಲ್ಲಿ ಸಂಪುಟ ಸೇರ್ಪಡೆ ಕುರಿತ ಚಟುವಟಿಕೆ ಚುರುಕುಗೊಂಡಿದೆ. ನಾಯಕತ್ವ ಬದಲಾವಣೆ ಕುರಿತು ಮಾತುಕತೆ ನಡೆಯುತ್ತಿರುವ ವೇಳೆಯಲ್ಲೇ ಸಂಪುಟ ಪುನಾರಚನೆ ಚರ್ಚೆ ಗರಿಗೆದರಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಮಂಗಳವಾರ ಶಾಸಕರ ‘ಪರೇಡ್’ ನಡೆದಿದೆ. ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಸೇರಿದಂತೆ ಹಲವು ಮಂದಿ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ತಮ್ಮ ಬೇಡಿಕೆಗಳನ್ನು ಮಂಡಿಸಿದ್ದಾರೆ. ಅಧಿಕೃತವಾಗಿ ಇದು ಸಹಜ ಭೇಟಿ ಎಂದು ಸಮರ್ಥಿಸಿಕೊಂಡರೂ, ಸಂಪುಟ ಪುನಾರಚನೆ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಈ ಭೇಟಿಗೆ ರಾಜಕೀಯ ಮಹತ್ವ ಸಿಕ್ಕಿದೆ.
ಇನ್ನೊಂದೆಡೆ, ಈಗಾಗಲೇ ಸಂಪುಟದಲ್ಲಿರುವ ಕೆಲವು ಸಚಿವರು ತಮ್ಮ ಸ್ಥಾನ ಉಳಿಸಿಕೊಳ್ಳಲು ಲಾಬಿ ನಡೆಸುತ್ತಿದ್ದಾರೆ. ಪೌರಾಡಳಿತ ಸಚಿವ ರಹೀಂ ಖಾನ್, ಈಶ್ವರ ಖಂಡ್ರೆ ಸೇರಿದಂತೆ ಕೆಲವರು ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಿಎಂ ಸಿದ್ದರಾಮಯ್ಯ ಅವರ ದೆಹಲಿ ಭೇಟಿಯ ಬಳಿಕ ಸಂಪುಟ ಬದಲಾವಣೆ ಕುರಿತ ಸ್ಪಷ್ಟ ಚಿತ್ರಣ ಸಿಗುವ ನಿರೀಕ್ಷೆಯಿದೆ.

