Sandalwood News: ಬಹುಭಾಷಾ ನಟಿ ಬಿ.ಸರೋಜಾ ದೇವಿ 87 ವಯಸ್ಸಿಗೆ ತಮ್ಮ ಜೀವನ ಪಯಣ ಮುಗಿಸಿ, ಇಹಲೋಕ ತ್ಯಜಿಸಿದ್ದಾರೆ. ಇವರ ನಿಧನಕ್ಕೆ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ: ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕನ್ನಡ ಚಿತ್ರರಂಗವು ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿಯ ಸುಮಾರು 200 ಚಿತ್ರಗಳಲ್ಲಿ ನಟಿಸಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದರು. ಸರೋಜಾದೇವಿ ಎಂದಾಕ್ಷಣ ಕಿತ್ತೂರು ಚೆನ್ನಮ್ಮ, ಬಬ್ರುವಾಹನ, ಅಣ್ಣತಂಗಿ ಮುಂತಾದ ಚಿತ್ರಗಳಲ್ಲಿನ ಅವರ ಮನೋಜ್ಞ ಅಭಿನಯ ಕಣ್ಣಮುಂದೆ ಬರುತ್ತದೆ. ಸದಭಿರುಚಿಯ ಚಿತ್ರಗಳ ಮೂಲಕ ಹಲವು ದಶಕಗಳ ಕಾಲ ಸಿನಿಪ್ರಿಯರನ್ನು ರಂಜಿಸಿದ್ದ ಅವರ ಅಗಲಿಕೆ ಭಾರತೀಯ ಚಿತ್ರರಂಗಕ್ಕಾದ ಬಹುದೊಡ್ಡ ನಷ್ಟ. ಸರೋಜಾದೇವಿಯವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸುವೆ. ಅವರ ದುಃಖತಪ್ತ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು.
ಡಿಸಿಎಂ ಡಿ.ಕೆ.ಶಿವಕುಮಾರ್: ಅಭಿನಯ ಸರಸ್ವತಿಗೆ ಪ್ರೀತಿಯ ವಿದಾಯ.. ಕನ್ನಡದ ಹಿರಿಯ ನಟಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಬಿ. ಸರೋಜಾ ದೇವಿ ಅವರ ನಿಧನದ ಸುದ್ದಿ ನೋವು ತಂದಿದೆ. ಕನ್ನಡ ಸೇರಿದಂತೆ ಪಂಚ ಭಾಷೆಗಳಲ್ಲಿ ನಟಿಸಿ, 6 ದಶಕಗಳ ಕಾಲ ಚಿತ್ರರಂಗಕ್ಕೆ ಸೇವೆ ಸಲ್ಲಿಸಿ, ಸೈ ಎನಿಸಿಕೊಂಡಿದ್ದರು. ಅಗಲಿದ ಅವರ ಆತ್ಮಕ್ಕೆ ದೇವರು ಚಿರಶಾಂತಿಯನ್ನು ನೀಡಲಿ. ಅಪಾರ ಅಭಿಮಾನಿಗಳಿಗೆ ಹಾಗೂ ಅವರ ಕುಟುಂಬ ಸದಸ್ಯರಿಗೆ ಈ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ಓಂ ಶಾಂತಿ.
ಬಿ.ವೈ.ವಿಜಯೇಂದ್ರ: ಕನ್ನಡಿಗರ ಹೆಮ್ಮೆಯ ಬಹುಭಾಷಾ ನಟಿ ಅಭಿನಯ ಸರಸ್ವತಿ ಬಿ. ಸರೋಜಾ ದೇವಿ ಅವರ ನಿಧನಕ್ಕೆ ಸಂತಾಪ ಕೋರುವೆ.ಪದ್ಮಶ್ರೀ, ಪದ್ಮಭೂಷಣ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಬಾಜನರಾಗಿದ್ದ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಮೇರು ನಟರಾದ ರಾಜ್ಕುಮಾರ್, ಕಲ್ಯಾಣ್ ಕುಮಾರ್ ಮೊದಲಾದ ನಟರೊಂದಿಗೆ ಅಭಿನಯಿಸಿ ಕನ್ನಡ ಚಿತ್ರರಂಗವಷ್ಟೇ ಅಲ್ಲದೇ ಬಹುಭಾಷಾ ನಟಿಯಾಗಿ ಕಲಾರಂಗಕ್ಕೆ ಅನನ್ಯ ಕೊಡುಗೆ ನೀಡಿದ್ದಾರೆ. ಅಮರ ಶಿಲ್ಪಿ ಜಕಣಾಚಾರಿ, ಮಲ್ಲಮ್ಮನ ಪವಾಡ, ಭಾಗ್ಯವಂತರು, ಬಬ್ರುವಾಹನ ಕಥಾಸಂಗಮ ಸೇರಿದಂತೆ ಬಹು ಭಾಷೆಗಳ ಸಿನಿಮಾಗಳಲ್ಲಿನ ಅವರ ನಟನೆ ಕಲಾಭಿಮಾನಿಗಳಲ್ಲಿ ಶಾಶ್ವತವಾಗಿರಲಿದೆ. ಸರೋಜಾ ದೇವಿ ಅವರ ಅಗಲಿಕೆಯ ನೋವಿನಲ್ಲಿರುವ ಅವರ ಕುಟುಂಬ ವರ್ಗ ಹಾಗೂ ಅವರ ಅಪಾರ ಅಭಿಮಾನಿಗಳ ದುಃಖದಲ್ಲಿ ನಾವೂ ಸಹ ಭಾಗಿಯಾಗಿದ್ದೇವೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಓಂ ಶಾಂತಿ.
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ: ಕನ್ನಡದ ಹಿರಿಯ ನಟಿ, ಬಹುಭಾಷಾ ತಾರೆ ಶ್ರೀಮತಿ ಬಿ.ಸರೋಜಾದೇವಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಮೇರುನಟರಾದ ಡಾ. ರಾಜ್ ಕುಮಾರ್ ಅವರು ಸೇರಿದಂತೆ ಭಾರತದ ಎಲ್ಲಾ ಭಾಷೆಗಳ ದಿಗ್ಗಜ ನಾಯಕ ನಟರೆಲ್ಲರ ಜತೆ ನಟಿಸಿದ್ದ ಸರೋಜಾದೇವಿ ಅವರು, ಅಭಿಮಾನಿಗಳ ಪಾಲಿಗೆ ಅಭಿನಯ ಸರಸ್ವತಿ ಆಗಿದ್ದರು. ಅವರ ಅನನ್ಯ ಅಭಿನಯ ನಮ್ಮೆಲ್ಲರನ್ನೂ ಮಂತ್ರಮುಗ್ಧರನ್ನಾಗಿ ಮಾಡುತ್ತಿತ್ತು. ಕನ್ನಡ ಬೆಳ್ಳಿತೆರೆಯನ್ನು ಶ್ರೀಮಂತಗೊಳಿಸುವಲ್ಲಿ ಅಪಾರ ಕಾಣಿಕೆ ನೀಡಿರುವ ಅವರು; ಕಿತ್ತೂರು ಚೆನ್ನಮ್ಮ, ಬಬ್ರುವಾಹನ ಸೇರಿದಂತೆ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರ ಅಗಲಿಕೆ ಚಿತ್ರರಂಗಕ್ಕೆ, ನಾಡಿಗೆ ಬಹುದೊಡ್ಡ ನಷ್ಟ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ: ಕನ್ನಡದ ಹಿರಿಯ ನಟಿ, ಪಂಚ ಭಾಷೆಗಳಲ್ಲಿ ಸುಮಾರು 6 ದಶಕಗಳ ಕಾಲ ಚಿತ್ರರಂಗದಲ್ಲಿ ಸೇವೆ ಮಾಡಿರುವ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಬಿ. ಸರೋಜಾ ದೇವಿ ಅವರ ನಿಧನದ ಸುದ್ದಿ ನಿಜಕ್ಕೂ ಆಘಾತ ತಂದಿದೆ. ಇವರು ಪಂಚ ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದು, ಚಿತ್ರರಂಗದಲ್ಲಿನ ಸಾಧನೆಗೆ ಕೇಂದ್ರ ಸರ್ಕಾರ ಪದ್ಮಭೂಷಣ ನೀಡಿ ಪುರಸ್ಕರಿಸಿತ್ತು. ಅಗಲಿದ ಅವರ ಆತ್ಮಕ್ಕೆ ದೇವರು ಶಾಂತಿ ಸಿಗಲೆಂದು ಹಾಗೂ ಅಪಾರ ಅಭಿಮಾನಿಗಳು ಮತ್ತು ಅವರ ಕುಟುಂಬ ಸದಸ್ಯರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಓಂ ಶಾಂತಿ.
ವಿರೋಧ ಪಕ್ಷದ ನಾಯಕ ಆರ್.ಅಶೋಕ್: ಕನ್ನಡ ಚಿತ್ರರಂಗದ ಹಿರಿಯ ನಟಿ, ‘ಅಭಿನಯ ಸರಸ್ವತಿ’ ಎಂದೇ ಹೆಸರುವಾಸಿಯಾಗಿದ್ದ ಶ್ರೀಮತಿ ಬಿ.ಸರೋಜಾದೇವಿ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ಸುಮಾರು 160ಕ್ಕೂ ಚಿತ್ರಗಳಲ್ಲಿ ನಾಯಕ ನಟಿಯಾಗಿ ಅಭಿನಯಿಸಿದ್ದ ಅವರ ಅಗಲಿಕೆಯಿಂದ, ಕನ್ನಡ ಮಾತ್ರವಲ್ಲದೆ ಇಡೀ ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ, ಅವರ ಕುಟುಂಬ ಸದಸ್ಯರಿಗೆ, ಅಭಿಮಾನಿಗಳಿಗೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ.
ಮಾಜಿ ಸಂಸದ ಪ್ರತಾಪ್ ಸಿಂಹ: ಕನ್ನಡ ಚಿತ್ರರಂಗದ ಹಿರಿಯ ನಟಿ, ‘ಅಭಿನಯ ಸರಸ್ವತಿ’ ಎಂದೇ ಹೆಸರುವಾಸಿಯಾಗಿದ್ದ ಶ್ರೀಮತಿ ಬಿ.ಸರೋಜಾದೇವಿ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ . ಓಂ ಶಾಂತಿ.