Thursday, July 31, 2025

Latest Posts

ಸಂವಿಧಾನ ವಿರೋಧಿ ಶಕ್ತಿಗಳನ್ನ ಮೊಳಕೆಯಲ್ಲೇ ಚಿವುಟಿ ಹಾಕಿ ; ಅಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ..

- Advertisement -

ಬೆಂಗಳೂರು : ಸಂವಿಧಾನದ ಆಶಯ ಮತ್ತು ಧ್ಯೇಯೋದ್ದೇಶಗಳಿಗೆ ಯಾರೂ ವಿರುದ್ಧವಾಗಿ ಕಾರ್ಯನಿರ್ವಹಿಸಬಾರದು. ಅಂತಹ ಶಕ್ತಿಗಳು ಬೆಳೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಇತ್ತೀಚಿನ ದಿನಗಳಲ್ಲಿ ಇಂತಹ ಶಕ್ತಿಗಳು ತಲೆ ಎತ್ತುತ್ತಿದ್ದು, ಅಂತಹ ಶಕ್ತಿಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕು. ಅಂತಹ ವ್ಯಕ್ತಿಗಳೂ ಯಾರೇ ಆಗಿದ್ದರೂ, ಅವರನ್ನು ಮಟ್ಟ ಹಾಕುವುದು ಅಂತಹ ಶಕ್ತಿಗಳು ಬೆಳೆಯದಂತೆ ನೋಡಿಕೊಳ್ಳಬೇಕಾದುದು ಡಿಸಿ, ಸಿಇಒ ಹಾಗೂ ಎಸ್ಪಿಗಳ ಜವಾಬ್ದಾರಿ ತಾನೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದ್ದಾರೆ.

ವಿಧಾನಸೌಧದಲ್ಲಿಂದು ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯನ್ನು ನಡೆಸಿ ರಾಜ್ಯದಲ್ಲಿನ ಪ್ರಗತಿ ಪರಿಶೀಲನೆಯ ಜೊತೆಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಸಂವಿಧಾನ ವಿರೋಧಿ, ಜನ ವಿರೋಧಿ ದುಷ್ಟ ಶಕ್ತಿಗಳು ಕೆಲವು ಕಡೆ ಬಾಲ ಬಿಚ್ಚುತ್ತಿವೆ. ಅವರು ಎಷ್ಟೇ ಪ್ರಭಾವಿ ಆಗಿರಲಿ, ಕಾನೂನು ಹಾಳು ಮಾಡಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಿ. ಇಲ್ಲದಿದ್ದರೆ ನಿಮ್ಮ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿಮತ್ತು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಡಿಸಿ, ಸಿಇಒ ಹಾಗೂ ಎಸ್ಪಿಗಳು ಅಹಂ ಬಿಟ್ಟು ಕೆಲಸ ಮಾಡಿ..

ಕಾನೂನು ಸುವ್ಯವಸ್ಥೆ ಹದಗೆಟ್ಟರೆ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಇವೆರಡಕ್ಕೂ ನೇರಾ ನೇರಾ ಸಂಬಂಧವಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ, ಅಭಿವೃದ್ಧಿ ಕುಂಟಿತವಾದಂತೆ. ಇದಕ್ಕೆ ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳು ನೇರ ಹೊಣೆ. ನಾವು ಜನರ ತೆರಿಗೆ ದುಡ್ಡಿನಲ್ಲಿ ಆಡಳಿತ ನಡೆಸುತ್ತಿದ್ದೇವೆ. ನಾವು ಮತ್ತು ನೀವು ಎಲ್ಲಾ ಸವಲತ್ತುಗಳನ್ನು ಅನುಭವಿಸುತ್ತಿರುವುದು ಜನರ ತೆರಿಗೆ ಹಣದಿಂದ ಎನ್ನುವುದನ್ನು ಮರೆಯಬಾರದು. ಕಾರು, ಮನೆ ಸೇರಿ ಎಲ್ಲಾ ಸವಲತ್ತುಗಳನ್ನು ನಾವು ಕೊಟ್ಟಿರುವುದು ತೆರಿಗೆ ಹಣದಲ್ಲಿ. ಆದ್ದರಿಂದ ಜನಪರ ಧೋರಣೆಯಲ್ಲಿ ಕೆಲಸ ಮಾಡಬೇಕು. ಇದೇ ಪ್ರಜಾಪ್ರಭುತ್ವದ ಮೂಲ ಆಶಯ ಎಂದು ಒತ್ತಿ ಹೇಳಿದ್ದಾರೆ.

ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿಗಳು ಮತ್ತು ಸಿಇಒ ಗಳು ತಮ್ಮ ಅಹಂ ಬದಿಗೊಟ್ಟಿ ಸಮನ್ವಯದಿಂದ ಕೆಲಸ ಮಾಡಿದರೆ ಮಾತ್ರ ರಾಜ್ಯದ ಸಮಗ್ರ ಅಭಿವೃದ್ಧಿ ಸಾಧ್ಯ. ಈ ಉದ್ದೇಶಕ್ಕೇ ನೀವುಗಳು ಐಎಎಸ್‌ ಮಾಡಿರುವುದು. ಇದನ್ನು ಅರ್ಥ ಮಾಡಿಕೊಳ್ಳಬೇಕು. 10-10-1949 ರಂದು ಸಂವಿಧಾನ ಜಾರಿ ಸಭೆಯಲ್ಲಿ ಇಂಡಿಯನ್‌ ಸಿವಿಲ್‌ ಸರ್ವೀಸ್‌ ಬೇಕಾ ಎಂದು ಚರ್ಚೆ ಆಗಿ ಐಎಎಸ್‌ ಬೇಕು ಎನ್ನುವ ನಿರ್ಧಾರಕ್ಕೆ ಬರಲಾಗಿದೆ. ಆ ಸಭೆಯಲ್ಲಿ ವಲ್ಲಭಾಬಾಯಿ ಪಟೇಲರು ದೇಶವನ್ನು ನೈಜ ಸ್ವಾತಂತ್ರ್ಯ ಹೋರಾಟಗಳ ಆಶಯದಲ್ಲಿ ಮುನ್ನಡೆಸಲು ಐಎಎಸ್‌ ಸೇವೆ ಇರಬೇಕು, ಇದರ ನೈಜ ಕಾಳಜಿಯನ್ನು ನೀವು ಅರ್ಥ ಮಾಡಿಕೊಳ್ಳಬೇಕು ಎಂದು ಸಿಎಂ ಅಧಿಕಾರಿಗಳಿಗೆ ಇತಿಹಾಸದ ಪಾಠ ಮಾಡಿದ್ದಾರೆ.

ಸಂವಿಧಾನದ ಆಶಯಗಳಿಗೆ, ಧ್ಯೇಯೋದ್ದೇಶಗಳಿಗೆ ಬದ್ದರಾಗಿರಿ..!

ವಲ್ಲಭಬಾಯಿ ಅವರ ಮಾತನ್ನು ನಾವು ಅರ್ಥಮಾಡಿಕೊಳ್ಳಬೇಕು. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲಸ ಮಾಡುವವರ ವಿರುದ್ಧ ಮತ್ತು ಜನಪರ ಆಶಯಗಳಿಗೆ ಸ್ಪಂದಿಸದಿದ್ದರೆ ಅವರ ವಿರುದ್ಧ ನಾವು ಕ್ರಮ ಕೈಗೊಳ್ಳಬೇಕಾಗುತ್ತದೆ. ನೀವೆಲ್ಲಾ ಸಂವಿಧಾನ ಓದಿದ್ದೀರಿ, ಅದರ ಆಶಯಗಳಿಗೆ, ಧ್ಯೇಯೋದ್ದೇಶಗಳಿಗೆ ಬದ್ದರಾಗಿದ್ದೀರಿ ಎಂದು ನಂಬಿದ್ದೇನೆ. ಇದನ್ನು ಕಾರ್ಯ ರೂಪಕ್ಕೆ ತರುವುದರಲ್ಲಿ ವಿಫಲರಾದವರ ವಿರುದ್ಧ ನಾನು ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲು ನಿರ್ಧಿರಿಸಿದ್ದೇನೆ ಎಂದು ಖಡಕ್‌ ವಾರ್ನ್‌ ಮಾಡಿದ್ದಾರೆ.

ಇನ್ನೂ ಜಿಲ್ಲಾ ಮಟ್ಟದ ಶಾಂತಿ ಸಮಿತಿ ಅಧ್ಯಕ್ಷರು ಜಿಲ್ಲಾಧಿಕಾರಿಗಳೇ ಆಗಿರ್ತಾರೆ. ಶಾಂತಿ ಕಾಪಾಡಲು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಅದನ್ನು ಬಿಟ್ಟು ಶಾಂತಿಭಂಗ ಆದ ಮೇಲೆ ಪೋಸ್ಟ್‌ ಮಾರ್ಟಂ ಮಾಡುತ್ತಾ ಕೂರಬಾರದು. ಮೊದಲೇ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ಏನು ಸಮಸ್ಯೆ ನಿಮಗೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಬಾಲ್ಯ ವಿವಾಹ ಆಗುವುದು ಜಿಲ್ಲಾಧಿಕಾರಿಗಳ ಗಮನಕ್ಕೆ ಏಕೆ ಬರುವುದಿಲ್ಲ? ನಿಮ್ಮ ಕೆಳಗಿನವರು ನಿಮಗೆ ವರದಿ ಮಾಡುವುದಿಲ್ಲವೇ? ಕೆಳಗಿನವರು ನಿಮಗೆ ಹೇಳದಿದ್ದರೆ ನಿಮಗೆ ದಕ್ಷತೆ ಇಲ್ಲ ಎಂದು ಅರ್ಥ. ನಿಮಗೆ ಅಧಿಕಾರಿಗಳ ಮೇಲೆ ನಿಯಂತ್ರಣ ಇಲ್ಲ, ನಿಮ್ಮ ಬಗ್ಗೆ ಅವರಿಗೆ ಭಯ ಇಲ್ಲ ಎಂದೇ ಅರ್ಥ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ರಾಜ್ಯದಲ್ಲಿ 700 ಬಾಲ್ಯ ವಿವಾಹ ಅಧಿಕಾರಿಗಳ ಕಿವಿ ಹಿಂಡಿದ ಸಿದ್ದರಾಮಯ್ಯ..

ಈ ವರ್ಷ 700 ಬಾಲ್ಯ ವಿವಾಹ ನಡೆದಿದೆ, ಬಾಲ್ಯದಲ್ಲೇ ತಾಯಂದಿರಾದ ಘಟನೆಗಳೂ ವರದಿಗಳಾಗಿವೆ. ಈ ಬಗ್ಗೆ ಹಲವು ಕಡೆ ಎಫ್‌ ಐಆರ್‌ ಕೂಡ ದಾಖಲಾಗಿಲ್ಲ ಎನ್ನುವುದು ನನ್ನ ಗಮನಕ್ಕೆ ಬಂದಿದೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ 700 ಬಾಲ್ಯ ವಿವಾಹ ನಡೆಯುತ್ತಿದೆ ಎಂದರೆ ಹೇಗೆ? ಬಾಲ್ಯವಿವಾಹ ತಡೆಗೆ ಕಾಯ್ದೆ, ಕಾನೂನುಗಳಿವೆ. ಆದರೂ ಇದನ್ನು ಪರಿಣಾಮಕಾರಿಯಾಗಿ ಕೆಲವು ಕಡೆ ಬಳಸಿಲ್ಲ. ಇದು ತಪ್ಪಲ್ಲವೇ ಎಂದು ಖಾರವಾಗಿಯೇ ಕಿವಿ ಹಿಂಡಿದ್ದಾರೆ. ರಾಜ್ಯದಲ್ಲಿ ಈ ವರ್ಷ 1395 ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಪೋಕ್ಸೋ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗುವಂತೆ ನೋಡಿಕೊಳ್ಳಬೇಕು. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಸರಿಯಾದ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಸೂಚಿಸಿದ್ದಾರೆ

ಅನರ್ಹ ಪಡಿತರ ಚೀಟಿಗಳು ಇನ್ನೂ ಹೇಗೆ ಉಳಿದುಕೊಂಡಿವೆ: ಸಿ.ಎಂ ಪ್ರಶ್ನೆ..

ಅನರ್ಹ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು. ಆದರೆ ಇದರಲ್ಲಿ ನಿರೀಕ್ಷಿತ ಪ್ರಗತಿ ಯಾಕೆ ಸಾಧ್ಯವಾಗಿಲ್ಲ. ರಾಜ್ಯದಲ್ಲಿ ಸುಮಾರು ಶೇ. 74ರಷ್ಟು ಬಿಪಿಎಲ್ ಕಾರ್ಡುಗಳಿದ್ದು, ಅನರ್ಹರನ್ನು ಗುರುತಿಸಿ ತೆಗೆದು ಹಾಕುವ ಮೂಲಕ ಅರ್ಹರಿಗೆ ಸವಲತ್ತು ಒದಗಿಸುವ ಕಾರ್ಯ ನಡೆಯಬೇಕಿದೆ ಎಂದು ಸೂಚನೆ ನೀಡಿಯಾಗಿತ್ತು. ಆದರೂ ಇದರಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿ ಆಗಿಲ್ಲ ಏಕೆ ಎಂದು ಪ್ರಶ್ನಿಸಿದ್ದಾರೆ. ಇನ್ನೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಭೆಗೆ ಆಮಿಸಿದ್ದ ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡುವಂತೆ ತಾಕೀತು ಮಾಡಿದ್ದಾರೆ. ಅಲ್ಲದೆ ಕರ್ತವ್ಯ ಲೋಪ ಕಂಡು ಬಂದರೆ ತಕ್ಷಣವೇ ಕಠಿಣ ಕ್ರಮ ಕೈಗೊಳ್ಳುವ ಸಂದೇಶ ರವಾನಿಸಿದ್ದಾರೆ.

- Advertisement -

Latest Posts

Don't Miss