ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ರೈತ ಸಂಘಟನೆಗಳು ಸೇರಿದಂತೆ ಕೆಲ ಸಂಘ ಸಂಸ್ಥೆಗಳು ಸೇರಿ ಇಂದು ಬೆಂಗಳೂರು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿವೆ. ಇದರಿಂದ ರಾಜ್ಯ ರಾಜಧಾನಿಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಇನ್ನು ಪ್ರತಿಭಟನೆಯ ಭದ್ರತೆಗೆ ನಿಯೋಜನೆ ಮಾಡಿದ ಪೊಲೀಸರಿಗೆ ಹೋಟೆಲ್ನಿಂದ ತಿಂಡಿ ಸರಬರಾಜು ಮಾಡಲಾಗಿದ್ದು, ಅದರಲ್ಲಿ ಸತ್ತ ಇಲಿ ಪತ್ತೆಯಾಗಿದೆ. ಇದನ್ನು ಕಂಡು ಪೊಲೀಸರು ಶಾಕ್ ಆಗಿದ್ದಾರೆ.
ಹೌದು…ಮಂಗಳವಾರ ಬೆಳಗ್ಗೆ ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭದ್ರತೆಗೆ ನಿಯೋಜಿಸಲಾಗಿದ್ದ ಯಶವಂತಪುರ ಟ್ರಾಫಿಕ್ ಪೊಲೀಸರಿಗೆ ತಂದಿದ್ದ ರೈಸ್ ಬಾತ್ನಲ್ಲಿ ಸತ್ತ ಇಲಿ ಪತ್ತೆಯಾಗಿದೆ. ಪೊಲೀಸ್ ಇಲಾಖೆಯಿಂದ ಸರಬರಾಜು ಮಾಡಿದ ಊಟದ ಪ್ಯಾಕೆಟ್ ತೆರೆದಾಗ ಅದರಲ್ಲಿ ಇಲಿ ಕಂಡುಬಂದಿದೆ. ಅದನ್ನು ನೋಡಿ ಪೊಲೀಸ್ ಸಿಬ್ಬಂದಿ ಹೌಹಾರಿದ್ದಾರೆ.
ಅಲ್ಲದೇ ಸತ್ತು ಬಿದ್ದಿರುವ ಊಟಕ್ಕೆ ಪೊಲೀಸ್ ಸಿಬ್ಬಂದಿ ಆಕ್ರೋಶಗೊಂಡಿದ್ದು, ಇಂತಹ ಊಟ ತಿಂದು ಹೆಚ್ಚು ಕಡಿಮೆಯಾದ್ರೆ ಯಾರು ಹೊಣೆ ಎಂದು ಕಿಡಿಕಾರಿದ್ದಾರೆ. ಇನ್ನು ಖಾಸಗಿ ಹೋಟೆಲ್ ನಿಂದ ಕಳಪೆ ಮಟ್ಟದ ಊಟ ಪೂರೈಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಊಟ ಸರಬರಾಜು ಮಾಡಿದ ಹೋಟೆಲ್ ಯಾವುದು ಎನ್ನುವ ಮಾಹಿತಿ ತಿಳಿದುಬಂದಿಲ್ಲ.
ಹೋಟೆಲ್ ಮಾಲೀಕನ ವಿರುದ್ಧ ಕ್ರಿಮಿನಲ್ ಕೇಸ್
ಈ ಬಗ್ಗೆ ಬೆಂಗಳೂರಲ್ಲಿ ಸಂಚಾರಿ ಜಂಟಿ ಪೊಲೀಸ್ ಆಯುಕ್ತ ಅನುಚೇತ್ ಪ್ರತಿಕ್ರಿಯಸಿದ್ದು, ಸಂಚಾರಿ ಸಿಬ್ಬಂದಿಗೆ ನೀಡಿದ್ದ ಆಹಾರ ಪೊಟ್ಟಣದಲ್ಲಿ ಇಲಿ ಪತ್ತೆಯಾಗಿದೆ. ರೈಸ್ಬಾತ್ನಲ್ಲಿ ಇಲಿ ಪತ್ತೆಯಾಗಿರುವುದು ಬೆಳಕಿಗೆ ಬಂದಿದ್ದು, ಹೋಟೆಲ್ ಮಾಲೀಕನ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.
Cauvery Water : ಬೆಂಗಳೂರು ಬಂದ್ : ಟೌನ್ ಹಾಲ್ ಬಳಿ ಎಂದಿನಂತೆ ಜನ ಸಂಚಾರ