Davanagere News: ದಾವಣಗೆರೆ: ಕರ್ನಾಟಕದ ವಿಧಾನಸಭೆ ಕ್ಷೇತ್ರಗಳಾದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಇಂದು ಉಪಚುನಾವಣೆ ನಡೆಯುತ್ತಿದೆ. ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಮತ್ತು ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಈ ಸ್ಥಾನಗಳಿಗೆ ಇಂದು ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಮತದಾರರು ಯಾರ ಕೈ ಹಿಡಿಯಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಆಡಳಿತಾರೂಢ ಕಾಂಗ್ರೆಸ್ಗೆ ಎರಡೂ ಕ್ಷೇತ್ರಗಳು ಪ್ರತಿಷ್ಠೆಯ ಕಣವಾಗಿದ್ದು, ಅತ್ತ ಪ್ರತಿಪಕ್ಷ ಬಿಜೆಪಿ ಸಹ ಗೆಲುವಿಗೆ ಶತಾಯಗತಾಯ ಶ್ರಮಿಸುತ್ತಿದೆ.
ದಾವಣಗೆರೆ ದಕ್ಷಿಣ ಕ್ಷೇತ್ರದ ವಿವರ
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಮತ್ತು ಬಿಜೆಪಿಯಿಂದ ಶ್ರೀನಿವಾಸ್ ಟಿ. ದಾಸಕರಿಯಪ್ಪ ಸೇರಿದಂತೆ ಒಟ್ಟು 14 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಬಾಗಲಕೋಟೆ ಕ್ಷೇತ್ರದ ವಿವರ
ಕಾಂಗ್ರೆಸ್ನ ಉಮೇಶ್ ಮೇಟಿ ಮತ್ತು ಬಿಜೆಪಿಯ ವೀರಣ್ಣ ಚರಂತಿಮಠ ಸೇರಿದಂತೆ ಒಟ್ಟು 20 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ ನಡೆಯುತ್ತಿದೆ.
ಮತದಾನ ವಿವರ – ಬಾಗಲಕೋಟೆ – ದಾವಣಗೆರೆ ದಕ್ಷಿಣ
ಮತಗಟ್ಟೆ – 322 – 284
ಸಿಬ್ಬಂದಿ – 2500 – 1,489
ಕಣದಲ್ಲಿರುವ ಅಭ್ಯರ್ಥಿಗಳು – 9 – 25
ಒಟ್ಟು ಮತದಾರರು – 2,59,797 – 2,31,072
ಪುರುಷರು – 1,26,999 – 1,13,399
ಮಹಿಳೆಯರು – 1,32,775 – 1,17,690
ಸಿಬ್ಬಂದಿ ಮತ್ತು ಭದ್ರತೆ
ಚುನಾವಣಾ ಕರ್ತವ್ಯಕ್ಕಾಗಿ 1,430ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹೃದಯಾಘಾತ ಮತ್ತು ಬಿಪಿ ಸಮಸ್ಯೆ ಇರುವ ಸಿಬ್ಬಂದಿಗಾಗಿ ಪ್ರತಿ ಕೇಂದ್ರದಲ್ಲೂ ಹೆಲ್ತ್ ಚೆಕಪ್ ವ್ಯವಸ್ಥೆ ಮಾಡಲಾಗಿದೆ ಎರಡೂ ಕ್ಷೇತ್ರಗಳಾದ್ಯಂತ ವ್ಯಾಪಕ ಬಂದೋಬಸ್ತ್ ನಡುವೆ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಮತದಾನದ ಸಮಯ ಮತ್ತು ಸೌಲಭ್ಯ
ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಿರಿಯ ನಾಗರಿಕರು ಮತ್ತು ಅಂಗವಿಕಲರನ್ನು ಮತಗಟ್ಟೆಗೆ ಕರೆತರಲು ಜಿಲ್ಲಾಡಳಿತವು ಉಚಿತ ವಾಹನ ಸೌಲಭ್ಯವನ್ನು ಒದಗಿಸಿದೆ. ಸುಡು ಬಿಸಿಲಿನ ಹಿನ್ನೆಲೆಯಲ್ಲಿ ಮತಗಟ್ಟೆಗಳಲ್ಲಿ ಕುಡಿಯುವ ನೀರು ಮತ್ತು ನೆರಳಿನ ವ್ಯವಸ್ಥೆ ಮಾಡಲಾಗಿದೆ. ಇಂದು ದಾಖಲಾಗುವ ಮತಗಳ ಎಣಿಕೆಯು ಮೇ 4ರಂದು ನಡೆಯಲಿದ್ದು, ಅಂದು ಫಲಿತಾಂಶ ಪ್ರಕಟವಾಗಲಿದೆ.
ನಡೆದಿತ್ತು ಭರ್ಜರಿ ಪ್ರಚಾರ
ಈ ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಂಪುಟ ಸಚಿವರು ಬಿರುಸಿನ ಪ್ರಚಾರ ನಡೆಸಿದ್ದಾರೆ. ಬಾಗಲಕೋಟೆಯಲ್ಲಂತೂ ಸಿದ್ದರಾಮಯ್ಯನವರೇ ಖುದ್ದು ನಾಲ್ಕೈದು ದಿನ ಪ್ರಚಾರ ನಡೆಸಿದ್ದಾರೆ.
ಅತ್ತ ಪ್ರತಿಪಕ್ಷ ಬಿಜೆಪಿಯಿಂದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ಪ್ರಚಾರದ ಮುಂಚೂಣಿಯಲ್ಲಿದ್ದರು. ಅದರಲ್ಲೂ ಬಾಗಲಕೋಟೆಯಲ್ಲಿ ವೀರಣ್ಣ ಚರಂತಿಮಠ ಪರವಾಗಿ ಬಿ.ವೈ. ವಿಜಯೇಂದ್ರ ಅವರು ಬಿರುಸಿನ ರೋಡ್ ಶೋ ಮತ್ತು ಸಾರ್ವಜನಿಕ ಸಭೆಗಳನ್ನು ನಡೆಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೇರ ಸವಾಲು ಹಾಕಿದರು. ಇನ್ನು ದಾವಣಗೆರೆಯಲ್ಲಿ ಶ್ರೀನಿವಾಸ್ ಟಿ. ದಾಸಕರಿಯಪ್ಪ ಪರವಾಗಿ ಸ್ಥಳೀಯ ನಾಯಕರು ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದರು. ವಿಶೇಷವೆಂದರೆ, ಬಿಜೆಪಿಯಿಂದ ಉಚ್ಚಾಟನೆಗೊಂಡಿದ್ದರೂ ಸಹ, ಬಾಗಲಕೋಟೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪಕ್ಷದ ಅಭ್ಯರ್ಥಿ ಪರವಾಗಿ ಅಬ್ಬರದ ಪ್ರಚಾರ ನಡೆಸಿ ಗಮನ ಸೆಳೆದಿದ್ದಾರೆ.
ಸಂಗಮೇಶ್ ಸತ್ತೀಗೇರಿ, ಕರ್ನಾಟಕ ಟಿವಿ, ದಾವಣಗೆರೆ




