Political News: ಕಾಂಗ್ರೆಸ್ ಸರ್ಕಾರ ಷರಿಯಾ ಕಾನೂನನ್ನು ಅನಧಿಕೃತವಾಗಿ ಜಾರಿಗೆ ತಂದಿದೆ: ಆರ್.ಅಶೋಕ್

Political News: ಸಿಇಟಿ ಪರೀಕ್ಷೆಯಲ್ಲಿ ಓರ್ವ ವಿದ್ಯಾರ್ಥಿಗೆ ಜನಿವಾರ ತೆಗೆಯಲು ಹೇಳಿದ ವಿಷಯ ಇದೀಗ ಚರ್ಚೆಗೆ ಗ್ರಾಸವಾಗಿದೆ. ಕಳೆದ ವರ್ಷ ಓರ್ವ ಮಹಿಳೆಯ ಮಂಗಲಸೂತ್ರವನ್ನು ತೆಗೆದು ಪರೀಕ್ಷೆ ಬರೆಯಲು ಬರಬೇಕು ಎಂದು ಹೇಳಿ, ಅದು ಕೂಡ ವಿವಾದವಾಗಿತ್ತು. ಪ್ರತೀ ಸಲ ಜನಿವಾರ ಧರಿಸಿದವರಿಗೆ, ಜನಿವಾರ ತೆಗೆದೇ ಪರೀಕ್ಷೆ ಬರೆಯಲು ಬರಬೇಕು ಎಂದು ಹೇಳುವ ವಿಷಯ ಇದೀಗ ವಿವಾದವಾಗಿ ತಿರುವು ಪಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೋಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇನ್ನು ಈ ವಿಷಯಕ್ಕೆ ಸಂಬಂಧಿಸಿದಂತೆ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದು, ಹಿಜಬ್ ಧರಿಸಿ ಬಂದಾಗ ಏನೂ ಮಾತನಾಡದ ಕಾಂಗ್ರೆಸ್ ಸರ್ಕಾರ, ಇದೀಗ ಜನಿವಾರದ ವಿಷಯಕ್ಕೆ ಬಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಾಂಗಲ್ಯ, ಜನಿವಾರ ತೆಗೆಸುವ ಹಿಂದೂ ವಿರೋಧಿ ಕಾಂಗ್ರೆಸ್‌ ಸರ್ಕಾರದ ಕುಕೃತ್ಯಗಳು ಮುಂದುವರಿಯುತ್ತಲೇ ಇವೆ! ಕಳೆದ ವರ್ಷ ಸಿಇಟಿ, ನೀಟ್ ಪರೀಕ್ಷೆಗಳ ಸಂದರ್ಭದಲ್ಲಿ ಜನಿವಾರ ಕತ್ತರಿಸಿ, ಕೆಪಿಎಸ್ಸಿ ಪರೀಕ್ಷೆಯಲ್ಲಿ ಮಾಂಗಲ್ಯ ತೆಗೆಸಿ ಪರೀಕ್ಷೆ ಬರೆಯುವಂತೆ ಹೇಳಿದ್ದ ಕಾಂಗ್ರೆಸ್‌ ಸರ್ಕಾರ ಈ ವರ್ಷವೂ ತನ್ನ ಹಳೆ ಚಾಳಿ ಮುಂದುವರಿಸಿದೆ ಎಂದು ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಕೋರಮಂಗಲದ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯೊಬ್ಬನಿಗೆ ಜನಿವಾರ ತೆಗೆಸಿ ಪರೀಕ್ಷೆ ಬರೆಯುವಂತೆ ಒತ್ತಾಯಿಸುವ ಮೂಲಕ ಮತ್ತೊಮ್ಮೆ ಹಿಂದೂ ಸಮಾಜದ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತಂದಿದೆ. ಕಾಂಗ್ರೆಸ್‌ ಆಡಳಿತದಲ್ಲಿ ಒಂದೆಡೆ ಹಿಂದೂಗಳಿಗೆ ರಕ್ಷಣೆಯಿಲ್ಲ, ಇನ್ನೊಂದೆಡೆ ಹೀಗೆ ಹಿಂದೂಗಳ ನಂಬಿಕೆ, ಆಚಾರಗಳ ಮೇಲೆ ದಾಳಿ ಮಾಡುವ ಕೆಟ್ಟ ರಾಜಕಾರಣ ಮಾಡುತ್ತಿದೆ.

ಈ ಹಿಂದೆ ಕೆ.ಪಿ.ಎಸ್.ಸಿ ಪರೀಕ್ಷೆ ನಡೆಯುವ ಸಂದರ್ಭದಲ್ಲಿ, ಮಹಿಳೆಯೊಬ್ಬರ ಮಾಂಗಲ್ಯಸರವನ್ನು ತೆಗೆಸಿದ್ದರು, ಈ ಬಗ್ಗೆ ಮಾಧ್ಯಮದವರು ಕಾಂಗ್ರೆಸ್ಸಿಗರನ್ನು ಪ್ರಶ್ನಿಸಿದರೆ, “ಏಯ್‌ ಅದು ರೂಲ್ಸು ಕಣ್ರಿ” ಎಂದು ಅಬ್ಬರಿಸಿದ್ದರು. ಆದರೆ ಅದೇ ಮಾಧ್ಯಮದವರು ಹಾಗಾದರೆ ರೂಲ್ಸ್‌ ಪ್ರಕಾರ ಹಿಜಾಬ್‌ ಅನ್ನು ಏಕೆ ತೆಗೆಸಲಿಲ್ಲ ಎಂದು ಮರು ಪ್ರಶ್ನೆ ಹಾಕಿದರೆ ಅದಕ್ಕೆ ಕಾಂಗ್ರೆಸ್ಸಿಗರದ್ದು “ನೋ ಕಾಮೆಂಟ್ಸ್..ನೋ ಕಾಮೆಂಟ್ಸ್”‌ ಎಂದು ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.

ಸಿಇಟಿ ಪರೀಕ್ಷೆಯ ಹಾಲ್‌ ಟಿಕೆಟ್‌ ನಲ್ಲಿ ಆಗಲಿ ಅಥವಾ ಇತರ ಯಾವುದೇ ಮಾರ್ಗಸೂಚಿಯಲ್ಲಿ ಜನಿವಾರ ಧರಿಸಬಾರದು ಎಂದು ಎಲ್ಲಿಯೂ ಸಹ ಉಲ್ಲೇಖವಾಗಿರಲಿಲ್ಲ. ಹಾಗಿದ್ದ ಮೇಲೆ ಜನಿವಾರ ತೆಗೆಯುವಂತೆ ಬಲವಂತ ಮಾಡುವುದು ಯಾಕೆ? ಈ ಅನ್ಯಾಯಕ್ಕೆ, ದೌರ್ಜನ್ಯಕ್ಕೆ ಯಾರು ಹೊಣೆ?? ಎಂದು ಆರ್.ಅಶೋಕ್ ಪ್ರಶ್ನಿಸಿದ್ದಾರೆ.

ಸಂವಿಧಾನದ ಬಗ್ಗೆ ಮಾರುದ್ದ ಭಾಷಣ ಬಿಗಿಯುವ ಸಿಎಂ ಸಿದ್ದರಾಮಯ್ಯ ಜನಿವಾರ ಧರಿಸಿದ ವಿದ್ಯಾರ್ಥಿಯ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಿರುವುದು ಕಣ್ಣಿಗೆ ಕಾಣಿಸುತ್ತಿಲ್ಲವೇ? ರಾಜ್ಯದಲ್ಲಿರುವ ಕಾಂಗ್ರೆಸ್ ಅಲಿಯಾಸ್ ಆಧುನಿಕ ಮುಸ್ಲಿಂ ಲೀಗ್ ಸರ್ಕಾರ ಷರಿಯಾ ಕಾನೂನನ್ನು ಅನಧಿಕೃತವಾಗಿ ಜಾರಿಗೆ ತಂದಿದೆ. ಹಿಂದೂ ಆಚಾರ-ವಿಚಾರಗಳನ್ನು ಕಾಂಗ್ರೆಸ್ ದ್ವೇಷಿಸುತ್ತಿದೆ. ಒಂದೆಡೆ ರಂಜಾನ್ ತಿಂಗಳಲ್ಲಿ ಉರ್ದು ಮಾಧ್ಯಮ ಶಾಲೆಗಳ ಶಾಲಾ ಸಮಯವನ್ನು ಬದಲಾವಣೆ ಮಾಡುವ ಸರ್ಕಾರ ಮತ್ತೊಂದೆಡೆ ಪರೀಕ್ಷೆಯ ತಪಾಸಣೆ ನೆಪದಲ್ಲಿ ಮಾಂಗಲ್ಯ ತೆಗೆಯಲು, ಜನಿವಾರ ತುಂಡರಿಸಲು ಅವಕಾಶ ನೀಡುತ್ತಿದೆ.

ನ್ಯಾಯಾಲಯ ಸಮಾನ ವಸ್ತ್ರಸಂಹಿತೆಗೆ ಆದೇಶ ನೀಡಿದರೂ ಸಹ ಸಿದ್ದರಾಮಯ್ಯ ಸಾಹೇಬರು ಸೇರಿದಂತೆ ಕಾಂಗ್ರೆಸ್ ನಾಯಕರು ಹಿಜಾಬ್ ಹಕ್ಕುಗಳ ಬಗ್ಗೆ ಮಾತನಾಡಿದರು, ಬೀದಿಗಿಳಿದರು. ಆದರೆ ಇಂದು ಜನಿವಾರ ತುಂಡರಿಸಿದಾಗ ಅವರೆಲ್ಲರೂ ಮೌನಕ್ಕೆ ಶರಣಾಗಿದ್ದಾರೆ ಎಂದು ಆರ್.ಅಶೋಕ್ ಬೇಸರ ವ್ಯಕ್ತಪಡಿಸಿದ್ದಾರೆ.

ಜಾತಿಗಣತಿ ಹೆಸರಿನಲ್ಲಿ ಹಿಂದೂ ಸಮಾಜವನ್ನು ವಿಭಜಿಸುವುದು, ಹಿಂದೂ ಸಂಪ್ರದಾಯವನ್ನು ಮೂಢನಂಬಿಕೆ ಹೆಸರಿನಲ್ಲಿ ಅವಹೇಳನ ಮಾಡುವುದು, ಹಿಂದೂ ಆಚರಣೆ-ಸಂಪ್ರದಾಯಕ್ಕೆ ನಿರ್ಬಂಧ ಹೇರುವುದು, ಹಿಂದೂ ಧರ್ಮದ ಅವಹೇಳನ ಮಾಡುವವರಿಗೆ ಪ್ರಶಸ್ತಿ ನೀಡಿ ಗೌರವಿಸುವುದನ್ನು ಕಾಂಗ್ರೆಸ್ ನಿರಂತರವಾಗಿ ನಡೆಸುತ್ತಾ ಬಂದಿದೆ. ಇದಕ್ಕೆ ಮುಂದಿನ ದಿನಗಳಲ್ಲಿ ಸಂಘಟಿತ ಹಿಂದೂ ಸಮಾಜ ಉತ್ತರ ನೀಡಲಿದೆ. ಚಾಣಕ್ಯನ ಶಿಖೆಗೆ ಕೈಹಾಕಿದ ನಂದರ ಕಥೆಯಂತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ.

About The Author