Political News: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಪಂಚಮಸಾಲಿ ಸಮುದಾಯದವರು ತಮಗೆ ಮೀಸಲಾತಿ ಬೇಕು ಎಂದು ಹೋರಾಟ ನಡೆಸಿದ್ದಾರೆ. ಈ ಹೋರಾಟ ಹತ್ತಿಕ್ಕಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದು, ಹಲವರು ಗಾಯಗೊಂಡಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಈ ಹೋರಾಟ ನಡೆದಿದ್ದು, ಹೋರಾಟಗಾರರು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ವಾಗ್ವಾದ ನಡೆದಿದ್ದು, ವಾಗ್ವಾದ ವಿಕೋಪಕ್ಕೆ ತಿರುಗಿ ಲಾಠಿ ಚಾರ್ಜ್ ಮಾಡಲಾಗಿದೆ. ಇದಕ್ಕೂ ಸುಮ್ಮನಿರದ ಹೋರಾಟಗಾರರು, ಪೊಲೀಸರಿಗೆ ಕಲ್ಲು, ಚಪ್ಪಲಿ ತೂರಾಟ ಮಾಡಿದ್ದಾರೆ.
ಕಲ್ಲು ತೂರಾಟದಲ್ಲಿ 20ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದು, 50ಕ್ಕೂ ಹೆಚ್ಚು ಹೋರಾಟಗಾರರು ಗಾಯಗೊಂಡಿದ್ದಾರೆ. ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳನ್ನು ನಿಲ್ಲಿಸಿ, ಅದರ ಮುಂದೆ ರಸ್ತೆಯಲ್ಲೇ ಮಲಗಿ, ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ. ಈ ಕಾರಣಕ್ಕೆ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಬಸವ ಜಯ ಮೃತ್ಯುಂಜಯ ಸ್ವಾಮಿ ಸೇರಿ, ಹಲವು ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ವಾಮೀಜಿಯವರನ್ನು ಇನೋವಾ ಕಾರಿನಲ್ಲಿ ಕರೆದುಕೊಂಡು ಹೋಗಲಾಗಿದೆ. ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ್ ಬೆಲ್ಲದ್ ಸೇರಿ ಹಲವು ರಾಜಕೀಯ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.