Political News: ನಿರಂತರವಾಗಿ ಪಕ್ಷವಿರೋಧಿ ಹೇಳಿಕೆಗಳನ್ನು ನೀಡುವ ಮೂಲಕ ಬಿಜೆಪಿಗೆ ಮುಜುಗರ ತರುತ್ತಿದ್ದ ಹಿರಿಯ ನಾಯಕನನ್ನು ಪಕ್ಷದಿಂದ ಹೊರಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಮಾಡಲಾಗಿದೆ. ಈ ಕುರಿತು ಬಿಜೆಪಿಯ ಕೇಂದ್ರ ಶಿಸ್ತು ಸಮಿತಿಯಿಂದ ಆದೇಶವಾಗಿದ್ದು, ಅದರಲ್ಲಿ ಆರು ವರ್ಷಗಳ ಕಾಲ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಲಾಗಿದೆ.
ಇನ್ನೂ ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ಮಾಡಿ ಅವರ ಬಗ್ಗೆ ಅವಹೇಳನವಾಗಿ ಮಾತನಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೂ ನೋಟಿಸ್ ಕೊಡಲಾಗಿತ್ತು. ಅದಕ್ಕೆ ಉತ್ತರವನ್ನೂ ಕೊಟ್ಟಿದ್ದರು. ಇದೀಗ ದೆಹಲಿ ಬಿಜೆಪಿ ಹೈಕಮಾಂಡ್ನಿಂದ ಶಾಸಕ ಬಸನಗೌಡ ಪಾಟೀಲ್ ಅವರನ್ನು ಉಚ್ಛಾಟನೆ ಮಾಡಲಾಗಿದೆ. ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025 ಫೆಬ್ರವರಿ 10 ರಂದು ನೀಡಿದ್ದ ಶೋಕಾಸ್ ನೋಟಿಸ್ಗೆ ನಿಮ್ಮ ಪ್ರತಿಕ್ರಿಯೆಯನ್ನು ಪರಿಗಣಿಸಿದೆ ಮತ್ತು ಹಿಂದಿನ ಶೋಕಾಸ್ ನೋಟಿಸ್ಗಳಿಗೆ ಪ್ರತಿಕ್ರಿಯೆಯಾಗಿ ಉತ್ತಮ ನಡವಳಿಕೆ ಮತ್ತು ನಡವಳಿಕೆಯ ಭರವಸೆಗಳನ್ನು ನೀಡಿದ್ದರೂ ಸಹ, ನೀವು ಪಕ್ಷದ ಶಿಸ್ತಿನ ಪದೇ ಪದೇ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ, ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ 6 [ಆರು] ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ ಮತ್ತು ನೀವು ಇಲ್ಲಿಯವರೆಗೆ ಹೊಂದಿದ್ದ ಯಾವುದೇ ಪಕ್ಷದ ಹುದ್ದೆಯಿಂದ ನಿಮ್ಮನ್ನು ತೆಗೆದುಹಾಕಲಾಗಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಮೂಲಕ ಸದಾ ಯಡಿಯೂರಪ್ಪ ಹಾಗೂ ಕುಟುಂಬದ ವಿರುದ್ಧ ನಾಲಿಗೆ ಹರಿಬಿಡುತ್ತಿದ್ದ ಯತ್ನಾಳ್ ಅವರ ಬಗ್ಗೆ ವಿಜಯೇಂದ್ರ ಅವರು ಕಠಿಣ ನಿಲುವು ತಾಳಿದ್ದರು. ಆದರೆ ಅಂತಿಮವಾಗಿ ಅವರ ಉಚ್ಚಾಟನೆಯಿಂದ ವಿಜಯೇಂದ್ರ ಬಣದ ಕೈ ಮೇಲಾದಂತೆ ಕಾಣುತ್ತಿದೆ.