Hubli News: ಹಿಂದೂ ಮಹಿಳೆಯರ ಸುರಕ್ಷತೆ, ಆತ್ಮರಕ್ಷಣೆ ಹಾಗೂ ಧಾರ್ಮಿಕ ಜಾಗೃತಿಯ ಉದ್ದೇಶದಿಂದ ಶ್ರೀರಾಮ ಸೇನೆ ಮತ್ತು ಕರ್ನಾಟಕ ದುರ್ಗಾ ಸೇನೆ ವತಿಯಿಂದ ಹುಬ್ಬಳ್ಳಿಯಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಸಾವಿರಾರು ಮಹಿಳೆಯರು ಹಾಗೂ ವಿದ್ಯಾರ್ಥಿನಿಯರಿಗೆ ಉಚಿತವಾಗಿ ತ್ರಿಶೂಲ ವಿತರಣೆ ಮಾಡಲಾಯಿತು.
ನಗರದ ಇಂದಿರಾ ಗಾಜಿನ ಮನೆಯ ಸಮೀಪದ ಆರ್.ಎನ್. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಶ್ರೀರಾಮ ಸೇನೆ ಮತ್ತು ಕರ್ನಾಟಕ ದುರ್ಗಾ ಸೇನೆ ವತಿಯಿಂದ ತ್ರಿಶೂಲ ದೀಕ್ಷಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹಿಂದೂ ಮಹಿಳೆಯರ ಸುರಕ್ಷತೆ ಹಾಗೂ ಆತ್ಮರಕ್ಷಣೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ನಡೆದ ಕಾರ್ಯಕ್ರಮದಲ್ಲಿ ಮಹಿಳೆಯರು, ಹೈಸ್ಕೂಲ್ ಹಾಗೂ ಕಾಲೇಜು ವಿದ್ಯಾರ್ಥಿನಿಯರು ಸೇರಿದಂತೆ ವಿವಿಧ ಮಹಿಳಾ ಸಂಘಟನೆಗಳ ಸದಸ್ಯೆಯರು ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಸುಮಾರು ಐದು ಸಾವಿರ ತ್ರಿಶೂಲಗಳನ್ನು ಉಚಿತವಾಗಿ ವಿತರಣೆ ಮಾಡಲಾಯಿತು. ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮಕ್ಕೆ ಶ್ರೀಮಾತಾ ಆಶ್ರಮದ ಅಧ್ಯಕ್ಷೆ ಮಾತಾಜಿ ತೇಜೋಮಯಿ, ಶ್ರೀರಾಮ ಸೇನೆಯ ಉತ್ತರ ಪ್ರಾಂತದ ಗೌರವಾಧ್ಯಕ್ಷ ಸತ್ಯಪ್ರಮೋದಾನಂದ ಸರಸ್ವತಿ ಸ್ವಾಮೀಜಿ ಹಾಗೂ ಗೋಕುಲ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಮೋಹನ ಗುರುಸ್ವಾಮಿ ದಿವ್ಯ ಸಾನಿಧ್ಯ ವಹಿಸಿದ್ದರು.
ಕಾರ್ಯಕ್ರಮಕ್ಕೆ ಹಿಮಾಚಲ ಪ್ರದೇಶದ ಸನಾತನ ಧರ್ಮ ಪ್ರಚಾರಕಿ ಮೀನಾಕ್ಷಿಜೀ ಶೇರಾವತಾ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸೀಮಾ ಲದವಾ ಹಾಗೂ ನೇಹಾ ಹಿರೇಮಠ ಅವರ ತಾಯಿ ಗೀತಾ ಹಿರೇಮಠ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಹಿಳೆಯರಲ್ಲಿ ಆತ್ಮವಿಶ್ವಾಸ, ಆತ್ಮರಕ್ಷಣೆ ಹಾಗೂ ಧಾರ್ಮಿಕ ಜಾಗೃತಿ ಹೆಚ್ಚಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಮುಖಂಡರು ತಿಳಿಸಿದರು.




