Hubli News: ಹುಬ್ಬಳ್ಳಿ: ಇಲ್ಲಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ರಘುವೀರಾನಂದ ಮಹಾರಾಜ್ (60) ನಿನ್ನೆಯಷ್ಟೇ ನಿಧನರಾಗಿದ್ದು, ಕಲ್ಯಾಣ ನಗರದ ಐದನೇ ಅಡ್ಡರಸ್ತೆಯಲ್ಲಿರುವ ಮಠದ ಆವರಣದಲ್ಲಿಂದು ಬೆಳಿಗ್ಗೆ ಸ್ವಾಮೀಜಿಯವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಸ್ವಾಮೀಜಿಗಳ ದರ್ಶನಕ್ಕೆ ನಾಡಿನ ವಿವಿಧ ಮೂಲೆಗಳಿಂದ ಮಠಾಧೀಶರು, ಮುಖಂಡರು ಹಾಗೂ ಸಾರ್ವಜನಿಕರು ಆಗಮಿಸಿದ್ದು, ಅಂತಿಮ ದರ್ಶನಕ್ಕೆ ಸಾಗರೋಪಾದಿಯಲ್ಲಿ ಜನರು ಹರಿದು ಬಂದಿದ್ದಾರೆ.1988ರಲ್ಲಿ ತಮ್ಮ ಕಾಲೇಜು ದಿನಗಳಲ್ಲಿ ಬೆಂಗಳೂರಿನ ರಾಮಕೃಷ್ಣ ಮಠದ ಸಂಪರ್ಕಕ್ಕೆ ಬಂದ ಅವರು, ವಿವೇಕಾನಂದ ಯುವಕ ಸಂಘದ ಸದಸ್ಯರಾಗುವ ಮೂಲಕ ತಮ್ಮನ್ನು ಆಶ್ರಮದ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರು.
ಸ್ವಾಮಿ ಪುರುಷೋತ್ತಮಾನಂದಜಿ ಮಹಾರಾಜ್ ಅವರಿಂದ ಸ್ಫೂರ್ತಿಗೊಂಡು, ಅವರ ಮಾರ್ಗದರ್ಶನದಲ್ಲಿ 1992ರಲ್ಲಿ ಬೆಂಗಳೂರಿನಲ್ಲಿ ರಾಮಕೃಷ್ಣ ಸಂಕೀರ್ತನ ಸಭೆಯನ್ನು ಪ್ರಾರಂಭಿಸಿದರು. ಇದರ ಉದ್ದೇಶ ಭಜನೆ – ಸಂಕೀರ್ತನೆಗಳ ಮೂಲಕ ದಿವ್ಯತ್ರಯರ (ರಾಮಕೃಷ್ಣ ಪರಮಹಂಸರು, ಸ್ವಾಮಿ ವಿವೇಕಾನಂದ, ಶಾರದಾಮಾತೆ) ಸಂದೇಶವನ್ನು ಮನೆ ಮನೆಗೂ ತಲುಪಿಸುವುದಾಗಿತ್ತು.
2000ರಲ್ಲಿ ಧಾರವಾಡದ ರಾಮಕೃಷ್ಣ ವಿವೇಕಾನಂದ ಆಶ್ರಮಕ್ಕೆ ಬಂದು ಅಲ್ಲಿ ಒಂದು ವರ್ಷ ಸೇವೆ ಸಲ್ಲಿಸಿದರು. ನಂತರ ಸ್ವಾಮಿ ಪುರುಷೋತ್ತಮಾನಂದಜಿಯವರ ಆದೇಶದಂತೆ ಹುಬ್ಬಳ್ಳಿಗೆ ಬಂದ ಅವರು, 2002ರ ಮೇ 13ರಂದು ರಾಮಕೃಷ್ಣ ವಿವೇಕಾನಂದ ಆಶ್ರಮವನ್ನು ಸ್ಥಾಪಿಸಿದರು ಎಂಬುವುದು ಹೆಮ್ಮೆಯ ಸಂಗತಿಯಾಗಿದೆ.