ಮತ್ತೆ ರಾಜ್ಯದಲ್ಲಿ ಮಳೆ ಆರ್ಭಟ ಸಾಧ್ಯತೆ!!

ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿಯುತ್ತಿದೆ. ಬೆಂಗಳೂರನ್ನು ಸೇರಿ ಹಲವೆಡೆ ಧಾರಾಕಾರ ಮಳೆಯ ಸಾಧ್ಯತೆಯ ಬಗ್ಗೆ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಒಂದು ವಾರದಿಂದ ಒಣಹವೆ ಮತ್ತು ಚಳಿ ಮುಂದುವರಿದಿದ್ದರೂ, ಇದೀಗ ಮತ್ತೆ ರಾಜ್ಯದ ಹಲವಾರು ಭಾಗಗಳಲ್ಲಿ ಮಳೆ ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಿಂಚು-ಗುಡುಗು ಸಹಿತ ಭಾರೀ ಮಳೆ ನಿರೀಕ್ಷಿಸಲಾಗಿದೆ. ಕರಾವಳಿಯಲ್ಲಿ ಗಾಳಿಯ ವೇಗ ಪ್ರತಿ ಗಂಟೆಗೆ 40ರಿಂದ 60 ಕಿ.ಮೀ ವೇಗದಲ್ಲಿ ಬೀಸುವ ಸಂಭವವಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ಒಣಹವೆ ಮುಂದುವರಿಯಲಿದೆ.

ರಾಜ್ಯದ ಉತ್ತರ ಒಳನಾಡಿನ ಬೀದರ್, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಯಪುರ, ಬಾಗಲಕೋಟೆ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಇನ್ನೂ ಮೂರು ದಿನಗಳ ಕಾಲ ಹಗುರದಿಂದ ಮಧ್ಯಮ ಮಟ್ಟದ ಮಳೆಯ ಸಾಧ್ಯತೆ ಇದೆ. ತಾಪಮಾನದಲ್ಲಿ ದೊಡ್ಡ ಬದಲಾವಣೆ ವರದಿಯಾಗಿಲ್ಲ ಮತ್ತು ಸಮುದ್ರದಲ್ಲಿ ಅಪಾಯದ ಸ್ಥಿತಿ ಇಲ್ಲದ ಕಾರಣ ಮೀನುಗಾರರಿಗೆ ಯಾವುದೇ ಎಚ್ಚರಿಕೆ ನೀಡಲಾಗಿಲ್ಲ.

ಬೆಂಗಳೂರು ನಗರದಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಪ್ರಾತಃಕಾಲದಲ್ಲಿ ಮಂಜು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 27 ಡಿಗ್ರಿ ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಇರುತ್ತದೆ. ಮುಂದಿನ 48 ಗಂಟೆಗಳಲ್ಲೂ ಇದೇ ವಾತಾವರಣ ಮುಂದುವರಿದು, ಕೆಲವು ಕಡೆಗಳಲ್ಲಿ ಚದುರಿದ ಮಳೆಯಾಗಲಿದೆ.

ನವೆಂಬರ್ 17ರಿಂದ ರಾಜ್ಯದ ದಕ್ಷಿಣ ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ನಿರೀಕ್ಷೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಹಾಸನ, ಕೊಡಗು ಹಾಗೂ ಚಿಕ್ಕಮಗಳೂರಿನಲ್ಲಿ ಮಳೆ ಆಗಲಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.

ವರದಿ : ಲಾವಣ್ಯ ಅನಿಗೋಳ

About The Author