ರೈತರ ಬದುಕು ನಾಶವಾದರೂ ಸರಿ, ತಮ್ಮ ಕುರ್ಚಿ ಗಟ್ಟಿಯಾಗಿರಬೇಕು ಅಂತಾರೆ ಸಿದ್ದರಾಮಯ್ಯ: R.Ashok

Political News: ಸಿಎಂ ಕುರ್ಚಿಗಾಗಿ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಕದನದ ಬಗ್ಗೆ ಎಲ್ಲರಿಗೂ ತಿಳಿದಿದೆ. ಅಲ್ಲದೇ 1 ಕಡೆ ಕುರ್ಚಿಗಾಾಗಿ ಜಗಳ ನಡೆಯುತ್ತಿದ್ದರೆ, ಇನ್ನ“ಂದು ಕಡೆ ರೈತರು ಸಮಸ್ಯೆಗೆ ಪರಿಹಾರ ನೀಡಿ ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕಾರಣಕ್ಕೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದು, ವಾಗ್ದಾಳಿ ನಡೆಸಿದ್ದಾರೆ.

ಕುರ್ಚಿ ಕಿತ್ತಾಟದಲ್ಲಿ ಅನ್ನದಾತರನ್ನ ಸಂಪೂರ್ಣವಾಗಿ ಮರೆತಿರುವ ರೈತ ವಿರೋಧಿ ಕಾಂಗ್ರೆಸ್ ಸರ್ಕಾರ! ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ನಿಮ್ಮ ಹೃದಯಹೀನ ಸರ್ಕಾರಕ್ಕೆ ಅನ್ನದಾತನ ಬದುಕಿಗಿಂತ ಅಧಿಕಾರವೇ ಮುಖ್ಯವಾಯಿತಾ? ಕರ್ನಾಟಕದ ಇತಿಹಾಸದಲ್ಲಿ ರೈತರ ನೋವಿಗೆ ಸ್ಪಂದಿಸದ ಈ ರೀತಿಯ ಸಂವೇದನಾರಹಿತ ಸರ್ಕಾರ ಕಂಡರಲಿಲ್ಲ ಎಂದು ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಕೊಟ್ಟ ಮಾತಿನಂತೆ ಅನ್ನದಾತರ ಸಂಕಷ್ಟಕ್ಕೆ ಸ್ಪಂದಿಸಿ, ಸೂಕ್ತ ಪರಿಹಾರ ನೀಡಬೇಕಿದ್ದ ಕಾಂಗ್ರೆಸ್ ಸರ್ಕಾರ ಇಂದು ರೈತರ ಸಮಸ್ಯೆಗಳನ್ನು ನಿರ್ಲಕ್ಷಿಸಿದೆ. ರೈತರ ಬದುಕು ನಾಶವಾದರೂ ಪರವಾಗಿಲ್ಲ, ನಮ್ಮ ಕುರ್ಚಿ ಭದ್ರವಾಗಿರಲಿ ಎನ್ನುವಂತಿದೆ ಸಿದ್ದರಾಮಯ್ಯ ಸರ್ಕಾರದ ನಡೆ! ಎಂದು ಆರ್.ಅಶೋಕ್ ಕಿಡಿಕಾರಿದ್ದಾರೆ.

ಗುರ್ಲಾಪುರದಲ್ಲಿ ಪ್ರತಿಭಟನಾ ನಿರತ ರೈತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘೋರ ದುರಂತ ಸಂಭವಿಸಿತು. ಆದರೆ, ಈ ಹೃದಯಹೀನ ಸರ್ಕಾರದ ಯಾವ ಮಂತ್ರಿಯೂ ರೈತನ ಕಣ್ಣೀರು ಒರೆಸುವ ಕೆಲಸ ಮಾಡಲಿಲ್ಲ.

ಇಷ್ಟಕ್ಕೂ

* ಸಕ್ಕರೆ ಸಚಿವರು ಎಲ್ಲಿದ್ದಾರೆ?

* ಕೃಷಿ ಸಚಿವರು ಏನು ಮಾಡುತ್ತಿದ್ದಾರೆ?

* ಜಿಲ್ಲಾ ಉಸ್ತುವಾರಿ ಸಚಿವರುಗಳು ಯಾಕೆ ತಲೆ ಮರೆಸಿಕೊಂಡಿದ್ದಾರೆ? ಎಂದು ಆರ್.ಅಶೋಕ್ ರಾಜ್ಯ ಸರ್ಕಾರಕ್ಕೆ ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದಾರೆ.

ತಮ್ಮದೇ ಸರ್ಕಾರದ ಅಸಡ್ಡೆಯಿಂದಾಗಿ ಜೀವನ್ಮರಣದ ಹೋರಾಟದಲ್ಲಿದ್ದ ರೈತನಿಗೆ ಸಾಂತ್ವನ ಹೇಳುವಷ್ಟು ಕನಿಷ್ಠ ಮಾನವೀಯತೆಯೂ ಇಲ್ಲದ ಮಂತ್ರಿಗಳು ಈ ರಾಜ್ಯಕ್ಕೆ ಬೇಕೇ? ರೈತರ ಬೇಡಿಕೆಯಂತೆ ಮೆಕ್ಕೆ ಜೋಳ ಖರೀದಿ ಕೇಂದ್ರಗಳನ್ನು ಆರಂಭಿಸಲು ನೀವು ಯಾರ ಆದೇಶಕ್ಕಾಗಿ ಕಾಯುತ್ತಿದ್ದೀರಿ ಸಿಎಂ ಸಿದ್ದರಾಮಯ್ಯನವರೇ?  ಎಂದು ಅಶೋಕ್ ಪ್ರಶ್ನಿಸಿದ್ದಾರೆ.

ನಿಮಗೆ ನಿಮ್ಮ ದೆಹಲಿ ಹೈಕಮಾಂಡ್‌ನಿಂದ ಸೂಚನೆ ಬರಬೇಕೇ? ರಾಹುಲ್ ಗಾಂಧಿ ಮತ್ತು ರಣದೀಪ್ ಸುರ್ಜೇವಾಲಾ ಅವರ ಅನುಮತಿ ಪತ್ರ ಬೇಕೇ? ರೈತರ ಜೀವ ಉಳಿಸಲು ಹೈಕಮಾಂಡ್‌ನ ಆದೇಶ ಬೇಕೆ? ನನ್ನ 30 ವರ್ಷದ ರಾಜಕಾರಣದಲ್ಲಿ ಇಂತಹ ರೈತ ವಿರೋಧಿ, ಸಂವೇದನಾರಹಿತ ಸರ್ಕಾರವನ್ನು ನಾನು ಕಂಡಿಲ್ಲ ಎಂದು ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

  • ಬರ ಪರಿಹಾರವಿಲ್ಲ
  • ಹೆಚ್ಚುವರಿ ಬೆಂಬಲ ಬೆಲೆ ಇಲ್ಲ
  • ಸಕಾಲಕ್ಕೆ ಖರೀದಿ ಕೇಂದ್ರಗಳ ಆರಂಭ ಇಲ್ಲ
  • ನೀರಾವರಿ ಯೋಜನೆಗಳಿಲ್ಲ
  • ಸಂಕಷ್ಟದಲ್ಲಿರುವ ರೈತನಿಗೆ ಸ್ಪಂದನೆಯಿಲ್ಲ.

ಇದು ಈ ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ಸಾಧನೆ!

ರೈತರ ಆಕ್ರಂದನವನ್ನು ನಿರ್ಲಕ್ಷಿಸಿ ಕುರ್ಚಿ ಭದ್ರಪಡಿಸಿಕೊಳ್ಳಲು ಹೊರಟಿರುವ ಈ ಸರ್ಕಾರವನ್ನು ಬುಡಮೇಲು ಮಾಡುವವರೆಗೆ ನಮ್ಮ ಹೋರಾಟ ನಿಲ್ಲದು ಎಂದು ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

About The Author