ಬಿಹಾರ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಸಚಿವ ಸಂಪುಟ ಪುನರ್ ರಚನೆಗೆ ಗ್ರೀನ್ ಸಿಗ್ನಲ್ ನೀಡುವ ಸಾಧ್ಯತೆ ಇದೆ. ನವೆಂಬರ್ನಲ್ಲಿ ಬಿಹಾರ ವಿಧಾನಸಭಾ ಚುನಾವಣೆ ನಡೀತಿದ್ದು, ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಬದಲಾವಣೆ ಗಾಳಿ ಬೀಸಲಿದೆಯಂತೆ. ಶೇಕಡ 50ರಷ್ಟು ಸಚಿವರನ್ನು ಕೈಬಿಡುವ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದು ಬಂದಿದೆ.
ಸಂಪುಟದಲ್ಲಿ ಖಾಲಿಯಿರುವ 2 ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ಸುಕರಾಗಿದ್ದಾರೆ. ಆದ್ರೆ, ಬಿಹಾರ ಚುನಾವಣೆ ಬಳಿಕವೇ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಈ ಮಧ್ಯೆ ಆಡಳಿತಕ್ಕೆ ಶಕ್ತಿ ತುಂಬಲು ಹೊಸ ಮುಖಗಳಿಗೆ ಅವಕಾಶ ನೀಡುವ ಕುರಿತು, ಚಿಂತನೆಗಳು ನಡೆಯುತ್ತಿವೆಯಂತೆ.
ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಇತ್ತೀಚೆಗಷ್ಟೇ ದೆಹಲಿಗೆ ಭೇಟಿ ನೀಡಿದ್ದು, ತಮಗೆ ಅವಕಾಶ ಸಿಗಲಿಲ್ಲವೆಂದು ವರಿಷ್ಠರ ಎದುರು ಬೇಸರ ಹೊರ ಹಾಕಿದ್ದಾರಂತೆ. ಮತ್ತೆ ಬಿ. ನಾಗೇಂದ್ರಗೆ ಸಂಪುಟದಲ್ಲಿ ಸ್ಥಾನ ನೀಡುವಂತೆ ಸಚಿವ ಜಮೀರ್ ಅಹಮದ್ ಒತ್ತಾಯಿಸಿದ್ದಾರೆ. ಮತ್ತೊಂದೆಡೆ, ಸಚಿವ ಮುನಿಯಪ್ಪ, ತಮ್ಮ ಮಗಳು ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ಗೆ, ತಮ್ಮ ಹುದ್ದೆಯನ್ನೇ ಬಿಟ್ಟುಕೊಡಲು ಸಿದ್ಧರಿದ್ದಾರೆಂಬ ಮಾತುಗಳು ಕೇಳಿಬರ್ತಿವೆ.
ಸಚಿವ ಎಚ್.ಸಿ. ಮಹದೇವಪ್ಪ ಸ್ಥಾನಕ್ಕೆ, ಹಳೇ ಮೈಸೂರಿನ ಮತ್ತೊಬ್ಬ ಎಸ್ಸಿ ಸಮುದಾಯದ ಶಾಸಕರನ್ನೇ ನೇಮಿಸುವ ಸಾಧ್ಯತೆ ಇದ್ದು, ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಪ್ರಬಲ ಸ್ಪರ್ಧಿಯಾಗಲಿದ್ದಾರೆಂದು ಹೇಳಲಾಗುತ್ತಿದೆ. ಸಚಿವರ ಕಾರ್ಯಕ್ಷಮತೆ ಕುರಿತು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್, ಈಗಾಗಲೇ ಹೈಕಮಾಂಡ್ಗೆ ರಿಪೋರ್ಟ್ ಸಲ್ಲಿಸಿದ್ದು, ಅದರ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಲಾಗುತ್ತಂತೆ.
ಮೂಲಗಳ ಪ್ರಕಾರ, ಸಿದ್ದರಾಮಯ್ಯ ಮಾತಿನಂತೆ ರಾಹುಲ್ ಗಾಂಧಿ ಮನವೊಲಿಸಲು ವೇಣುಗೋಪಾಲ್ ಮುಂದಾಗಿದ್ದಾರೆ. ಆದ್ರೆ, ತಮ್ಮ ನಿರ್ಧಾರವನ್ನು ಮತ್ತೊಮ್ಮೆ ಪರಿಶೀಲಿಸುವಂತೆ, ವೇಣುಗೋಪಾಲ್ಗೆ ರಾಹುಲ್ ಸೂಚಿಸಿದ್ದಾರೆ ಎನ್ನಲಾಗಿದೆ.