ಪತಿ ಮನೆಯವರ ಕಿರುಕುಳದಿಂದ ಬೇಸತ್ತ ಉಪನ್ಯಾಸಕಿ, ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ವಿಶ್ವೇಶ್ವರಯ್ಯ ಪಿಕಪ್ ಡ್ಯಾಮ್ನಲ್ಲಿ ಈ ಘಟನೆ ನಡೆದಿದೆ. 30 ವರ್ಷದ ಪುಷ್ಪಾವತಿ ಉಪನ್ಯಾಸಕಿಯಾಗಿದ್ರು. 11 ತಿಂಗಳ ಹಿಂದಷ್ಟೇ, ತಪಸ್ಸಿಹಳ್ಳಿಯ ವೇಣು ಜತೆ ಮದುವೆಯಾಗಿತ್ತು.
ಮದುವೆ ನಂತರ ಪತಿ ಮನೆಯಲ್ಲಿ ಪುಷ್ಪಾವತಿಗೆ ನಿರಂತರವಾಗಿ, ವರದಕ್ಷಿಣೆ, ಕಿರುಕುಳ ನೀಡಲಾಗುತ್ತಿತ್ತಂತೆ. ನಿವೇಶನ ಕೊಡಿಸುವಂತೆ ಪೀಡಿಸುತ್ತಿದ್ದರಂತೆ. ಈ ಬಗ್ಗೆ ವಿಡಿಯೋ ಮಾಡಿಟ್ಟು ಪುಷ್ಪಾವತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಾನು ಮದುವೆಯಾಗಿ ಗಂಡನ ಮನೆಗೆ ಹೋದ ದಿನದಿಂದ, ನನ್ನ ಗಂಡ ನನ್ನ ಜೊತೆ ಸರಿಯಾಗಿ ಸಂಸಾರ ಮಾಡಿಲ್ಲ. ನನ್ನಿಂದ ದೂರ ಉಳಿಯುತ್ತಿದ್ದರು. ಸಂಸಾರ ಮಾಡಬೇಕೆಂದು ಎಷ್ಟು ಪ್ರಯತ್ನ ಪಟ್ಟರೂ, ಸರಿಯಾಗಿ ಮಾತನಾಡುತ್ತಿರಲಿಲ್ಲ.

ಈ ವಿಚಾರವನ್ನು ನಮ್ಮ ಅತ್ತೆ ಮಾವನಿಗೆ ತಿಳಿಸಿದರೆ, ಎಲ್ಲಾ ಸರಿ ಹೋಗುತ್ತೆ ಸುಮ್ಮನಿರು ಎಂದು ಆರಂಭದಲ್ಲಿ ಹೇಳುತ್ತಿದ್ರು. ಗಂಡನಿಗೆ ನಾವು ಮಗು ಮಾಡಿಕೊಳ್ಳೋಣ ಎಂದು ಕೇಳಿದ್ರೆ, ಈಗ ಮಗು ಬೇಡ 1-2 ವರ್ಷ ಹೋಗಲಿ ಎನ್ನುತ್ತಿದ್ದರು. ನನಗೆ ಅನುಮಾನ ಬಂದು ನಿನಗೇನಾದರೂ ತೊಂದರೆ ಇದ್ರೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಳ್ಳೋಣ ಎಂದು ತಿಳಿಸಿದ್ದೆ. ಆಗ ನನಗೆ ಅವಾಚ್ಯ ಶಬ್ದಗಳಿಂದ ಬೈದಿದ್ದರು.
ಅವರನ್ನು ಮುಟ್ಟಿದರೆ ಕಾಲಿನಿಂದ ನನಗೆ ಒದೆಯುತ್ತಿದ್ದರು. ಮಗು ಬೇಕು ಎಂದರೆ ನನ್ನ ಚಿಕ್ಕ ಮಗನ ಬಳಿ ಹೋಗು ಎಂದು ಅತ್ತೆ-ಮಾವ ಹೇಳುತ್ತಿದ್ದರು. ಮೈದುನನೂ ಅದೇ ರೀತಿ ಮಾತಾಡಿ ಮಾನಸಿಕ ಹಿಂಸೆ ನೀಡುತ್ತಿದ್ದ. ಈ ಬಗ್ಗೆ ನನ್ನ ಹೆತ್ತವರಿಗೂ ತಿಳಿಸಿದ್ದೆ. ಅವರು ಬಂದು ಹೇಳಿದ್ರೂ ಏನೂ ಪ್ರಯೋಜನವಾಗಿಲ್ಲ ಎಂದು ಪುಷ್ಪಾವತಿ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

15 ದಿನದ ಹಿಂದೆ ಗಂಡನ ಮನೆಯವರು ಸೇರಿ, ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ. ಈ ವೇಳೆ ನನ್ನನ್ನು ಎಳೆದಾಡಿದ ಪರಿಣಾಮ ಗಾಯವಾಗಿದ್ದು, ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿರುತ್ತಾರೆ. ನೀನು ಕಂಪ್ಲೇಂಟ್ ಕೊಟ್ಟರೆ ಮತ್ತೆ ಮನೆಗೆ ಬರಲು ಸಾಧ್ಯವಿಲ್ಲ ಎಂದು ಮಾವ ಹೆದರಿಸಿದ್ದರು.
ಮತ್ತೆ ಇದೇ ವಿಚಾರವಾಗಿ ಮನೆಯಲ್ಲಿ ಗಲಾಟೆ ಆಗಿದ್ದು, ಈ ವೇಳೆ ನಾನು ಪೊಲೀಸರಿಗೆ ದೂರು ಕೊಡೋದಾಗಿ ಹೇಳಿದ್ದೆ. ಆಗ ನನ್ನ ಕತ್ತು ಹಿಸುಕಿ ಮನೆಯಿಂದ ಆಚೆ ಹಾಕಿದ್ದಾರೆ. ಇದನ್ನು ಪ್ರಶ್ನಿಸಲು ನನ್ನ ತಮ್ಮ ಹೋದಾಗ ಆತನ ಮೇಲೆಯೂ ಹಲ್ಲೆ ಮಾಡಿದ್ದಾರೆ. ಆತ ದೊಡ್ಡಬಳ್ಳಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದ ಅಂತಾ ಪುಷ್ಪಾವತಿ ವಿಡಿಯೋದಲ್ಲಿ ಹೇಳಿದ್ದಾರೆ. ಪುಷ್ಪಾವತಿ ಕಾಣಿಸದಿದ್ದಾಗ ದೊಡ್ಡಬಳ್ಳಾಪುರ ಮಹಿಳಾ ಠಾಣೆಯಲ್ಲಿ ಕುಟುಂಬಸ್ಥರು ಕೇಸ್ ದಾಖಲಿಸಿದ್ದಾರೆ.

