ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ಒಳಾಡಳಿತ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾದ ಶ್ರೀ ರಜನೀಶ್ ಗೋಯಲ್ ರವರ ಅಧ್ಯಕ್ಷತೆ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಸಮನ್ವಯ ಸಭೆ ನಡೆಯಿತು.
ಸಭೆಯನ್ನು ಉದ್ದೇಶಿಸಿ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಮಾತನಾಡಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸುವ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದ್ದು, ನಗರದ ಹೊರ ವರ್ತುಲ ರಸ್ತೆ(ORR)ಗಳ ಸರ್ವೀಸ್ ರಸ್ತೆಗಳಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸಂಚಾರಿ ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು.
ನಗರದ ಹೊರ ವರ್ತುಲ ರಸ್ತೆ(ORR)ಗಳ ಸರ್ವೀಸ್ ರಸ್ತೆಗಳಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿರುತ್ತಾರೆ. ಇದರಿಂದ ಸರ್ವೀಸ್ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಸಮಸ್ಯೆ ಆಗಲಿದೆ. ಈ ಸಂಬಂಧ ಹೊರವರ್ತುಲ ರಸ್ತೆಗಳ ಸರ್ವೀಸ್ ರಸ್ತೆಗಳಲ್ಲಿ ವಾಹನಗಳನ್ನು ನಿಲ್ಲಿಸಲು ಅವಕಾಶ ನೀಡಬಾರದು ಹಾಗೂ ಸಂಚಾರಿ ಪೊಲೀಸ್ ವಿಭಾಗ ಹಾಗೂ ಪಾಲಿಕೆ ಸಹಯೋಗದಲ್ಲಿ ನೋ ಫಾರ್ಕಿಂಗ್ ನಾಮಫಲಕಗಳನ್ನು ಅಳವಡಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಕೋಲ್ಡ್ ಮಿಕ್ಸ್ ಬಳಸಿ ರಸ್ತೆ ಗುಂಡಿಗಳನ್ನು ಮುಚ್ಚಿ:
ನಗರದಲ್ಲಿ ಪ್ರತಿನಿತ್ಯ ಮಳೆ ಸುರಿಯುತ್ತಿರುವ ಕಾರಣ ಹಾಟ್ ಮಿಕ್ಸ್ ರಸ್ತೆ ಗಂಡಿಗಳನ್ನು ಸರಿಯಾಗಿ ಮುಚ್ಚಲು ಸಾಧ್ಯವಾಗುತ್ತಿಲ್ಲ. ಈ ಪೈಕಿ ಕೋಲ್ಡ್ ಮಿಕ್ಸ್ ಬಳಸಿ ರೆಸ್ತೆ ಗುಂಡಿಗಳನ್ನು ಮುಚ್ಚಲು ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಮುಖ್ಯ ಅಭಿಯಂತರರಿಗೆ ಸೂಚನೆ ನೀಡಿದರು.
ಪಾದಚಾರಿ ಮಾರ್ಗಗಳಲ್ಲಿ ಸಾಮಗ್ರಿಗಳನ್ನು ತೆರವುಗೊಳಿಸಿ:
ಹೊರ ವರ್ತುಲ ರಸ್ತೆ ಹಾಗೂ ಪ್ರಮುಖ ರಸ್ತೆಗಳಲ್ಲಿ ಪಾದಚಾರಿ ಮಾರ್ಗಗಳಲ್ಲಿ ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ಮಾಡದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಅಲ್ಲದೇ ಕೆ.ಪಿ.ಟಿ.ಸಿ.ಎಲ್, ಬೆಸ್ಕಾಂ, ಜಲಮಂಡಳಿ ಸೇರಿದಂತೆ ಇನ್ನಿತರೆ ಇಲಾಖೆಗಳು ಕೆಲಸ ಮಾಡುವ ಸಾಮಗ್ರಿಗಳನ್ನು ರಸ್ತೆ ಬದಿ/ಪಾದಚಾರಿ ಮಾರ್ಗಗಳಲ್ಲೇ ಬಿಟ್ಟಿದ್ದರೆ ಅವುಗಳನ್ನು ಕೂಡಲೆ ತೆರವುಗೊಳಿಸಿ ಹತ್ತಿರದಲ್ಲಿರುವ ಖಾಲಿ ಸ್ಥಳಗಳಿಗೆ ಸ್ಥಳಾಂತರಿಸಬೇಕು. ಇಲ್ಲವಾದಲ್ಲಿ ರಸ್ತೆ ಬದಿ/ಪಾದಚಾರಿ ಮಾರ್ಗಗಳಲ್ಲಿ ಹಾಕಿರುವಂತ ಸಾಮಗ್ರಿಗಳುನ್ನು ಪಾಲಿಕೆ ವಶಕ್ಕೆ ಪಡೆದು ದಂಡ ವಿಧಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮ್ಯಾನ್ ಹೋಲ್ಸ್ ಹಾಗೂ ಸ್ಲ್ಯಾಬ್ ಗಳನ್ನು ಸರಿಪಡಿಸಿ:
ನಗರದ ಪ್ರಮುಖ ರಸ್ತೆಗಳಲ್ಲಿ ಮ್ಯಾನ್ ಹೋಲ್ ಗಳು ರಸ್ತೆ ಮಟ್ಟಕ್ಕಿತ ಎತ್ತರವಾಗಿದ್ದು, ಇದರಿಂದ ವಾಹನಗಳ ಸಂಚಾರಕ್ಕೆ ಅಡಚನೆಯಾಗಲಿದೆ. ಆದ್ದರಿಂದ ಮ್ಯಾನ್ ಹೋಲ್ ಗಳು ಎಲ್ಲೆಲ್ಲಿ ರಸ್ತೆ ಮಟ್ಟಕ್ಕಿಂತ ಎತ್ತವಾಗಿವೆ ಎಂಬುದನ್ನು ಜಲಮಂಡಳಿಯಿಂದ ಗುರುತಿಸಿ ಅವುಗಳನ್ನು ದುರಸ್ತಿ ಪಡಿಸಬೇಕು ಎಂದು ಸೂಚಿಸಿದರು.
ರಸ್ತೆ ಬದಿ ಪಾದಚಾರಿ ಮಾರ್ಗಗಳ ಸೈಡ್ ಡ್ರೈನ್ ಗಳ ಮೇಲೆ ಅಳವಡಿಸಿರುವ ಸ್ಲ್ಯಾಬ್ ಗಳು ಹಾಳಾಗಿದ್ದು, ಇದರಿಂದ ಮಳೆಗಾಲದಲ್ಲಿ ಪಾದಚಾರಿಗಳಿಗೆ ಸಾಕಷ್ಟು ಸಮಸ್ಯೆ ಆಗಲಿದೆ. ಆದ್ದರಿಂದ ಎಲ್ಲೆಲ್ಲಿ ಸ್ಲ್ಯಾಬ್ ಗಳು ಹಾಳಾಗಿವೆ ಅವುಗಳನ್ನು ಕೂಡಲೆ ಸರಿಪಡಿಸಲು ಸೂಚಿಸಿದರು.
ಜಂಕ್ಷನ್ ಗಳ ಅಭಿವೃದ್ಧಿ:
ನಗರದಲ್ಲಿ ಹೆಚ್ಚು ಸಂಚಾರ ದಟ್ಟಣೆಯಾಗುವ ಪ್ರಮುಖ ಜಂಕ್ಷನ್ ಗಳಾದ ಸಿಲ್ಕ್ ಬೋರ್ಡ್ ಜಂಕ್ಷನ್, ಜಯದೇವ ಜಂಕ್ಷನ್, ಟಿನ್ ಪ್ಯಾಕ್ಟರಿ ಜಂಕ್ಷನ್, ಹೆಬ್ಬಾಳ ಜಂಕ್ಷನ್, ಗೊರಗುಂಟೆಪಾಳ್ಯ ಜಂಕ್ಷನ್, ಕಾಡುಬಿಸಲಹಳ್ಳಿ ಜಂಕ್ಷನ್, ಸಾರಕ್ಕಿ ಜಂಕ್ಷನ್, ಆರ್.ಆರ್.ಎಂ.ಆರ್ ಜಂಕ್ಷನ್, ಇಬ್ಬಲೂರು ಜಂಕ್ಷನ್, ಜಯದೇವ ಜಂಕ್ಷನ್ ಗಳಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತ್ವರಿತಾಗಿ ಪೂರ್ಣಗೊಳಿಸಿ ವಾಹನಗಳ ಸುಲಲಿತ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಪ್ರತಾಪ್ ರೆಡ್ಡಿ, ಬಿ.ಎಂ.ಆರ್.ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಅಂಜುಂ ಫರ್ವೇಜ್, ಬಿಡಿಎ ಆಯುಕ್ತರಾದ ರಾಜೇಶ್ ಗೌಡ, ಜಲಮಂಡಳಿ ಅಧ್ಯಕ್ಷರಾದ ಜಯರಾಮ್, ಸಂಚಾರ ವಿಭಾಗದ ಜಂಟಿ ಆಯುಕ್ತರಾದ ರವಿಕಾಂತೇಗೌಡ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರಾದ ರಾಜೇಂದ್ರ ಚೋಳನ್, ಬಿಎಂಟಿಸಿ ನಿರ್ದೇಶಕರಾದ ಸೂರ್ಯಸೇನ್, ಪಾಲಿಕೆ ವಿಶೇಷ ಆಯುಕ್ತರಾದ ಡಾ. ತ್ರಿಲೋಕ್ ಚಂದ್ರ, ಕೆ.ಎಸ್.ಆರ್.ಟಿ.ಸಿ, ಬಿಡಿಎ, ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.




