ಮೋದಿ ಅವರ ನಾಯಕತ್ವದಲ್ಲಿ ರಾಷ್ಟ್ರವು ಶಕ್ತಿ, ಪ್ರಗತಿ, ಸಾಂಸ್ಕೃತಿಕ ಪುನರುತ್ಥಾನದ ಹೊಸಯುಗಕ್ಕೆ ಸಾಕ್ಷಿಯಾಗುತ್ತಿದೆ: ಕುಮಾರಸ್ವಾಮಿ

Political News: ಆದಿಚುಂಚನಗಿರಿಯಲ್ಲಿರುವ ಭೈರವೈಕ್ಯ ಮಂದಿರವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದಾರೆ.

ಮಂಡ್ಯದ ನಾಗಮಂಗಲದಲ್ಲಿರುವ ಆದಿಚುಂಚನಗಿರಿಗೆ ಇಂದು ಪ್ರಧಾನಿ ಮೋದಿ ಭೇಟಿ ನೀಡಿದ್ದು, ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆ ಮಾಡಿದ್ದಾರೆ. ಬಳಿಕ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. ಈ ವೇಳೆ ಪ್ರಧಾನಿ ಮೋದಿಯ ಜತೆಗೆ ಶ್ರೀ ಶ್ರೀ ನಿರ್ಮಲಾನಂದ ಸ್ವಾಮೀಜಿ, ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವರಾದ ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ, ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಈ ಪವಿತ್ರ ಸಂದರ್ಭದಲ್ಲಿ ಭಾರತದ ಗೌರವಾನ್ವಿತ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರಿಗೆ ನಾನು ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಅವರ ದೂರದೃಷ್ಟಿಯ ನಾಯಕತ್ವ, ಅಚಲ ಬದ್ಧತೆ ಮತ್ತು ದಣಿವರಿಯದ ಸಮರ್ಪಣೆ ನಾಯಕತ್ವ ರಾಷ್ಟ್ರದಾದ್ಯಂತ ಲಕ್ಷಾಂತರ ಜನರ ಆಳವಾದ ನಂಬಿಕೆ ಮತ್ತು ಪ್ರೀತಿಯನ್ನು ಗಳಿಸಿದೆ ಎಂದರು.

ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮಿಜಿ ಅವರ ದಿವ್ಯ ಮಾರ್ಗದರ್ಶನದಲ್ಲಿ ಹಾಗೂ ಸೇವೆ, ಶಿಕ್ಷಣ, ಕರುಣೆಯ ಮೂಲಕ ಸಮಾಜವನ್ನು ಪರಿವರ್ತಿಸಿದ ಅತ್ಯುನ್ನತ ಅಧ್ಯಾತ್ಮಿಕ ಶಕ್ತಿಯಾದ ಪದ್ಮಭೂಷಣ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮಿಜಿ ಅವರು ಹಾಕಿಕೊಟ್ಟ ಅನನ್ಯ ಪರಂಪರೆಗೆ ಮೀಸಲಾಗಿರುವ ಈ ಐತಿಹಾಸಿಕ ಸಮಾರಂಭದಲ್ಲಿ ಮಾಜಿ ಪ್ರಧಾನಿಗಳಾದ ಶ್ರೀ ಹೆಚ್.ಡಿ.ದೇವೇಗೌಡ ಅವರೊಂದಿಗೆ ನಾನು ಸಹ ಭಾಗಿಯಾಗಿದ್ದು ದಿವ್ಯಾನುಭೂತಿ ನೀಡಿದೆ ಎಂದು ಹೆಚ್ಡಿಕೆ ಹೇಳಿದ್ದಾರೆ.

ಗೌರವಾನ್ವಿತ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ಸ್ಫೂರ್ತಿದಾಯಕ ನಾಯಕತ್ವದಲ್ಲಿ ರಾಷ್ಟ್ರವು ಶಕ್ತಿ, ಪ್ರಗತಿ ಮತ್ತು ಸಾಂಸ್ಕೃತಿಕ ಪುನರುತ್ಥಾನದ ಹೊಸಯುಗಕ್ಕೆ ಸಾಕ್ಷಿಯಾಗುತ್ತಿದೆ. ಆಧ್ಯಾತ್ಮಿಕತೆ ಮತ್ತು ಅಭಿವೃದ್ಧಿ ಪರಸ್ಪರ ಪೂರಕವಾಗಿದ್ದು, ಸೇವೆ ಮತ್ತು ಏಕತೆಯ ಮೌಲ್ಯಗಳನ್ನು ಚೈತನ್ಯಶೀಲತೆಯಿಂದ ಬಲಪಡಿಸಲಾಗುತ್ತಿದೆ.  ಈ ಕ್ಷಣವು ಪೂಜ್ಯ ಶ್ರೀಗಳ ಆದರ್ಶಗಳಿಂದ ಮಾರ್ಗದರ್ಶಿಸಲ್ಪಟ್ಟ ಮತ್ತು ರಾಷ್ಟ್ರದ ಚುಕ್ಕಾಣಿ ಹಿಡಿದಿರುವ ಕ್ರಿಯಾಶೀಲ, ಬಲಿಷ್ಠ ನಾಯಕತ್ವದಿಂದ ವಿಕಸಿತ ಭಾರತ ನಿರ್ಮಾಣಕ್ಕೆ ನಾವೆಲ್ಲರೂ ಸಂಕಲ್ಪ ತೊಟ್ಟಿದ್ದೇವೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

About The Author