Uttara Kannada: ಶಿರಸಿ ಮನಗುಡ್ಡ ಬಳಿ ಭರ್ಜರಿ ಕಾರ್ಯಾಚರಣೆ: ಅಕ್ರಮ 473 ಚೀಲ ಪಡಿತರ ಅಕ್ಕಿ ಪತ್ತೆ

Uttara Kannada: ಜಿಲ್ಲೆಯ ಶಿರಸಿಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿರುವ ಅಧಿಕಾರಿಗಳು, ಅಕ್ರಮವಾಗಿ ಸಾಗಿಸುತ್ತಿದ್ದ ಭಾರೀ ಪ್ರಮಾಣದ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ತಹಸೀಲ್ದಾರ್ ಪಟ್ಟರಾಜಗೌಡ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ 473 ಚೀಲ ಅಕ್ಕಿ ಹಾಗೂ ಸಾಗಾಟಕ್ಕೆ ಬಳಸಿದ್ದ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ. ಲಾರಿ ಚಾಲಕನನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಿರಸಿ ತಾಲೂಕಿನ ನಿಲೇಕಣಿ ಭೀಮನಗುಡ್ಡ ಬಳಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ತಹಸೀಲ್ದಾರ್ ಪಟ್ಟರಾಜಗೌಡ ಅವರು ಪೊಲೀಸ್ ಇಲಾಖೆಯ ನೆರವಿನೊಂದಿಗೆ ದಾಳಿ ನಡೆಸಿದ್ದಾರೆ. ಈ ವೇಳೆ ಸಿದ್ದಾಪುರ ತಾಲೂಕಿನ ಹಾಳದಕಟ್ಟದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 473 ಚೀಲ ಪಡಿತರ ಅಕ್ಕಿ ಪತ್ತೆಯಾಗಿದೆ.

ಅಕ್ರಮವಾಗಿ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದ ಅಧಿಕಾರಿಗಳು, ಲಾರಿ ಚಾಲಕನನ್ನೂ ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಂಡಿರುವ ಅಕ್ಕಿಯ ಅಂದಾಜು ಮೌಲ್ಯ ಸುಮಾರು 8 ಲಕ್ಷ ರೂಪಾಯಿ ಎಂದು ತಿಳಿದುಬಂದಿದೆ. ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಜಾಲದ ಕುರಿತು ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

About The Author