Wednesday, October 15, 2025

Latest Posts

ಮುಡಾ ಪ್ರಕರಣದ ಬಗ್ಗೆ ತೀರ್ಪು ಪ್ರಕಟ: ಇದು ಬಿಜೆಪಿ-ಜೆಡಿಎಸ್‌ನ ಸೇಡಿನ ರಾಜಕೀಯ: ಸಿಎಂ ಸಿದ್ದರಾಮಯ್ಯ

- Advertisement -

Political News: ಮುಡಾ ಪ್ರಕರಣ ಸಂಬಂಧ ಉಚ್ಛ ನ್ಯಾಯಾಲಯವು ನೀಡಿರುವ ಆದೇಶದ ಕುರಿತು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.

ನಮ್ಮ ಸರ್ಕಾರವನ್ನು ಅಭದ್ರಗೊಳಿಸಲು ಹಾಗೂ ನನ್ನ ರಾಜಕೀಯ ಜೀವನಕ್ಕೆ ಮಸಿ ಬಳಿಯಲು ಬಿಜೆಪಿ, ಜೆಡಿಎಸ್ ನಡೆಸುತ್ತಿರುವ ಪ್ರಯತ್ನಕ್ಕೆ ಭವಿಷ್ಯದಲ್ಲಿ ಸೋಲು ಖಚಿತ. ಬಿಜೆಪಿ – ಜೆಡಿಎಸ್ ನಾಯಕರ ಸಂಚು, ರಾಜಭವನ ದುರುಪಯೋಗ ಹಾಗೂ ದುರ್ಬಳಕೆಗೆ ನಾನು ಹೆದರುವುದಿಲ್ಲ. ರಾಜ್ಯದ ಜನ, ಪಕ್ಷದ ಹೈಕಮಾಂಡ್, ಶಾಸಕರು, ಸಚಿವರು, ಕಾರ್ಯಕರ್ತರು ನನ್ನೊಂದಿಗಿದ್ದಾರೆ. ಕಾನೂನು ಹೋರಾಟಕ್ಕೆ ಹೈಕಮಾಂಡ್ ಸಹಕಾರ ನೀಡಲಿದೆ. ನರೆಂದ್ರ ಮೋದಿಯವರ ಬಿಜೆಪಿ ಸರ್ಕಾರ ಕೇವಲ ನನ್ನ ಮೇಲಷ್ಟೇ ಅಲ್ಲ, ಇಡೀ ದೇಶದ ವಿರೋಧಪಕ್ಷಗಳ ಮೇಲೆ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ.

ಬಿಜೆಪಿ ಹಾಗೂ ಜೆಡಿಎಸ್ ನವರು ಒಮ್ಮೆಯೂ ರಾಜ್ಯದಲ್ಲಿ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬಂದಿಲ್ಲ. ವಿಧಾನಸಭೆ ಚುನಾವಣೆಯಲ್ಲಿಯೂ ಸೋತಿದ್ದಾರೆ. ಬಿಜೆಪಿ ಈ ಹಿಂದೆ ಹಣಬಲದಿಂದ, ಆಪರೇಷನ್ ಕಮಲ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರೇ ಹೊರತು, ಜನರ ಆಶೀರ್ವಾದದೊಂದಿಗೆ ಎಂದಿಗೂ ಬಂದಿಲ್ಲ. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನ ಗೆದ್ದಿದ್ದೇವೆ ಹಾಗಾಗಿ ಆಪರೇಷನ್ ಕಮಲ ಮಾಡಲು ಅವರಿಗೆ ಸಾಧ್ಯವಾಗಲಿಲ್ಲ. ದುಡ್ಡನ್ನು ಕೊಟ್ಟು ಶಾಸಕರನ್ನು ಖರೀದಿಸುವ ಪ್ರಯತ್ನ ಮಾಡಿದ್ದರು, ಆದರೆ ನಮ್ಮ ಯಾವ ಶಾಸಕರೂ ದುಡ್ಡಿನ ಹಿಂದೆ ಹೋಗದ ಕಾರಣ ಅವರ ಪ್ರಯತ್ನ ವಿಫಲವಾಯಿತು ಎಂದು ಸಿಎಂ ಹೇಳಿದ್ರು.

ಬಿಜೆಪಿಯವರನ್ನು ನಾವು ರಾಜಕೀಯವಾಗಿ ಎದುರಿಸುತ್ತೇವೆ. ಬಿಜೆಪಿ ಅವರು ಹೇಳಿದ ಮಾತ್ರಕ್ಕೆ ನಾನು ರಾಜೀನಾಮೆ ಏಕೆ ಕೊಡಬೇಕು? ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಮೇಲೆ ಎಫ್.ಐ.ಆರ್ ಆಗಿದ್ದು, ಅವರು ಜಾಮೀನಿನ ಮೇಲೆ ಇದ್ದಾರೆ. ಅವರು ರಾಜೀನಾಮೆ ಕೊಟ್ಟಿದ್ದಾರೆಯೇ? ಇದು ಅವರಿಗೆ ಅನ್ವಯವಾಗುವುದಿಲ್ಲವೇ? ತನಿಖೆ ಹಂತದಲ್ಲಿಯೇ ರಾಜೀನಾಮೆ ಕೊಡಬೇಕು ಎನ್ನುವ ಬಿಜೆಪಿ ವಾದಕ್ಕೆ ಕುಮಾರಸ್ವಾಮಿ ಅವರ ಪ್ರತಿಕ್ರಿಯೆ ಏನೆಂದು ಕೇಳಿ ತಿಳಿಯಿರಿ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಎನ್‌ಎಸ್‌ಎಸ್ 218ರ ಹಾಗೂ ಪಿಸಿ ಕಾಯ್ದೆ 19ರಂತೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವುದನ್ನು ತಿರಸ್ಕರಿಸಿ, ಪಿಸಿ ಕಾಯ್ದೆಯ 17ಎ ಪ್ರಕಾರ ತನಿಖೆಗೆ ಉಚ್ಛನ್ಯಾಯಾಲಯ ಆದೇಶ ನೀಡಿದೆ. ಈ ತೀರ್ಪಿನ ಮೇಲೆ ಮುಂದಿನ ಕಾನೂನು ಹೋರಾಟದ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚೆ ಮಾಡಿ, ತೀರ್ಮಾನ ಮಾಡಲಾಗುವುದು. ನಾನು ತಪ್ಪು ಮಾಡಿಲ್ಲ. 17ಎ ರಡಿ ತನಿಖೆ ಮಾಡಲು ಆದೇಶ ನೀಡಿದ ಮಾತ್ರಕ್ಕೆ ನಾನು ತಪ್ಪು ಮಾಡಿದ್ದೇನೆ ಎಂದಲ್ಲ. ಇಡೀ ದೇಶದಲ್ಲಿ ವಿಪಕ್ಷಗಳ ಸರ್ಕಾರದ ಮೇಲೆ ಪಿತೂರಿ ಮಾಡಿದಂತೆ ಕರ್ನಾಟಕದಲ್ಲಿಯೂ ನನ್ನ ಹಾಗೂ ನಮ್ಮ ಸರ್ಕಾರದ ವಿರುದ್ಧ ಪಿತೂರಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಖಂಡಿತಾ ನನಗೆ ಜಯ ಸಿಗಲಿದೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಮ್ಮ ಸರ್ಕಾರದ ಬಡವರ ಪರ ಕಾರ್ಯಕ್ರಮಗಳನ್ನು ಬಿಜೆಪಿ ನಾಯಕರು ವಿರೋಧಿಸುತ್ತಾ ಬಂದಿದ್ದಾರೆ. ಶೂಭಾಗ್ಯ, ಪಶುಭಾಗ್ಯ, ಶಾದಿಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ಹಲವು ಜನಪರ ಯೋಜನೆಗಳು ಹಾಗೂ ಈಗಿನ ಗ್ಯಾರಂಟಿ ಯೋಜನೆಗಳನ್ನು ಸಹ ವಿರೋಧಿಸುತ್ತಿದ್ದಾರೆ. ಬಿಜೆಪಿಯವರು ಸಾಮಾಜಿಕ ನ್ಯಾಯ, ಬಡವರ ವಿರೋಧಿಗಳು. ಸರ್ಕಾರಕ್ಕೆ ಕಪ್ಪು ಮಸಿ ಬಳಿಯುವುದು ಅವರ ದುರಾಲೋಚನೆ. ಹೈಕೋರ್ಟ್ ಆದೇಶದ ಪ್ರತಿಯನ್ನು ಸಂಪೂರ್ಣ ಪರಿಶೀಲಿಸಿ, ಮುಂದಿನ ಪ್ರತಿಕ್ರಿಯೆ ನೀಡುತ್ತೇನೆ ಎಂದು ಸಿಎಂ ಹೇಳಿದ್ದಾರೆ.

- Advertisement -

Latest Posts

Don't Miss