Political News: ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದವರು ಮೀಸಲಾತಿ ಬೇಕು ಎಂದು ಪ್ರತಿಭಟನೆ ನಡೆಸಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡು, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಇದಕ್ಕೆ ವಿರುದ್ಧವಾಗಿ ಪ್ರತಿಭಟನಾಕಾರರು ಪೊಲೀಸರ ವಾಹನದ ಮೇಲೆ ಕಲ್ಲು, ಚಪ್ಪಲಿ ತೂರಾಟ ನಡೆಸಿದ್ದಾರೆ. ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಈ ಬಗ್ಗೆ ಆಕ್ರೋಶ ಹೊರಹಾಕಿದ್ದು, ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿದ್ದು, ಖಂಡನೀಯ ಘಟನೆ ಎಂದಿದ್ದಾರೆ.
ಪಂಚಮಸಾಲಿ ಸಮುದಾಯದ 2ಎ ಪ್ರವರ್ಗದ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟದ ಸ್ವರೂಪದ ಕುರಿತು ಈ ಮುಂಚೆಯೇ ಸರ್ಕಾರದ ಅರಿವಿಗೆ ಬಂದಿದ್ದರೂ ಯಾವುದೇ ಮುಂಜಾಗ್ರತಾ ಕ್ರಮ ವಹಿಸದ ಕಾಂಗ್ರೆಸ್ ಸರ್ಕಾರ ದುರುದ್ದೇಶಪೂರ್ವಕವಾಗಿ ಚಳುವಳಿಯನ್ನು ಹತ್ತಿಕ್ಕುವ ದುರಾಲೋಚನೆಯಿಂದ ಚಳುವಳಿ ನಿರತ ಅಮಾಯಕರ ಮೇಲೆ ಲಾಠಿಚಾರ್ಜ್ ಪ್ರಯೋಗಿಸಿ ಚಳುವಳಿಗಾರರು ಮಾರಣಾಂತಿಕ ಪೆಟ್ಟು ಅನುಭವಿಸಲು ಕಾರಣವಾಗಿರುವುದು ಅತ್ಯಂತ ಖಂಡನೀಯ ಘಟನೆಯಾಗಿದೆ ಎಂದು ವಿಜಯೇಂದ್ರ ಅಭಿಪ್ರಾಯ ಪಟ್ಟಿದ್ದಾರೆ.
ಕಳೆದ ಒಂದು ವಾರದಿಂದಲೂ ಪೂಜ್ಯ ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳು ಹೋರಾಟದ ಕುರಿತು ಮಾಹಿತಿಗಳನ್ನು ಒದಗಿಸುತ್ತಲೇ ಬಂದಿದ್ದಾರೆ. ಈ ಹಂತದಲ್ಲಿ ಪೂಜ್ಯರೊಂದಿಗೆ ಸಕಾರಾತ್ಮಕ ಮಾತುಕತೆ ನಡೆಸಿ ಸಮಸ್ಯೆಗೆ ಪರಿಹಾರ ಹುಡುಕುವ ಮಾರ್ಗೋಪಾಯಗಳನ್ನು ಕಂಡುಹಿಡಿಯದೇ ಚಳುವಳಿ ತೀವ್ರ ಸ್ವರೂಪ ಪಡೆಯಲು ಕಾರಣವಾಗಿರುವ ಕಾಂಗ್ರೆಸ್ ಸರ್ಕಾರದ ಅಸಮರ್ಥ ನಡೆ ಈ ಹಿಂದಿನ ರೈತ ಚಳುವಳಿಗಳನ್ನು ಬಗ್ಗುಬಡಿದ ಮಾದರಿಯನ್ನು ನೆನಪಿಸುತ್ತಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಕೂಡಲೇ ಸರ್ಕಾರ ಈ ಸಂಬಂಧವಾಗಿ ಬೇಜವಾಬ್ದಾರಿಯಿಂದ ವರ್ತಿಸಿರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಿ, ಅಮಾಯಕರ ಮೇಲೆ ಹಲ್ಲೆ ಆಗಿರುವ ಕುರಿತು ಕ್ಷಮೆಯಾಚಿಸಲಿ. ಮಾರಣಾಂತಿಕ ಪೆಟ್ಟು ತಿಂದವರಿಗೆ ಸೂಕ್ತ ಚಿಕಿತ್ಸೆ ಹಾಗೂ ಪರಿಹಾರವನ್ನು ಒದಗಿಸಲಿ ಎಂದು ಒತ್ತಾಯಿಸುತ್ತೇನೆ ಎಂದು ವಿಜಯೇಂದ್ರ ಹೇಳಿದ್ದಾರೆ.