ಸಿಎಂ ಸಿದ್ದರಾಮಯ್ಯ ಅವರು ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಮಹಾಮೈತ್ರಿ, ಅಂದರೆ ಮಹಾಘಟಬಂಧನ್ ವಿಜಯಶಾಲಿಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಆಹ್ವಾನ ಬಂದರೆ ಬಿಹಾರ ಚುನಾವಣಾ ಪ್ರಚಾರದಲ್ಲೂ ಭಾಗವಹಿಸುವುದಾಗಿ ತಿಳಿಸಿದ್ದಾರೆ.
ಬಿಹಾರದಲ್ಲಿ ಆಡಳಿತ ವಿರೋಧಿ ಅಲೆ ಬಿರುಸಾಗಿದೆ. ಬಿಜೆಪಿಯ ಭ್ರಷ್ಟಾಚಾರ ಮತ್ತು ದುರಾಡಳಿತ ಈ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಅವರು ಹೇಳಿದರು. ಬಿಹಾರದ ಎನ್ಡಿಎ ಸರ್ಕಾರವು ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿರುವುದಾಗಿ ಟೀಕಿಸಿದ ಸಿದ್ದರಾಮಯ್ಯ, ನಮ್ಮ ರಾಜ್ಯದಲ್ಲಿ ಗೃಹ ಲಕ್ಷ್ಮಿ ಯೋಜನೆಯಡಿ ತಿಂಗಳಿಗೆ 1.24 ಕೋಟಿ ಮಹಿಳೆಯರು 2,000 ರೂ. ಪಡೆಯುತ್ತಿದ್ದಾರೆ ಎಂದು ಹೇಳಿದರು. ಇದುವರೆಗೆ ಗ್ಯಾರಂಟಿ ಯೋಜನೆಗಳಿಗೆ 1 ಲಕ್ಷ ಕೋಟಿ ರೂ.ಗಿಂತ ಹೆಚ್ಚು ಹಣ ಖರ್ಚಾಗಿದೆ ಎಂದು ವಿವರಿಸಿದರು.
ಇದೇ ವೇಳೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ರಾಜಕೀಯ ನಿಲುವನ್ನು ಟೀಕಿಸಿದ ಸಿದ್ದರಾಮಯ್ಯ, ಯಾವುದೇ ಸೈದ್ಧಾಂತಿಕ ಬದ್ಧತೆ ಇಲ್ಲದೆ ಅವರು ಯಾವಾಗಲೂ ಹೊಸ ಮೈತ್ರಿಗಳು ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು. ಬಿಹಾರದಲ್ಲಿ ಬಡತನ ವ್ಯಾಪಕವಾಗಿದ್ದು, ಬಡವರು, ಹಿಂದುಳಿದ ವರ್ಗಗಳು, ದಲಿತರು ಹಾಗೂ ಅಲ್ಪಸಂಖ್ಯಾತರು ಕಾಂಗ್ರೆಸ್ ಪರ ನಿಂತಿದ್ದಾರೆ ಎಂಬ ವಿಶ್ವಾಸವೂ ಅವರು ವ್ಯಕ್ತಪಡಿಸಿದರು.
ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳ ಕುರಿತು ಮಾತನಾಡಿದ ಸಿದ್ದರಾಮಯ್ಯ, ಈ ವರ್ಷ ಪ್ರತಿ ಜಿಲ್ಲೆಯಿಂದ ಸಾಧಕರನ್ನು ಆಯ್ಕೆ ಮಾಡಿ ಗೌರವಿಸಲಾಗಿದ್ದು, ಅರ್ಜಿಗಳನ್ನು ಕರೆಯದೆ ಸಾಮಾಜಿಕ ನ್ಯಾಯ ಮತ್ತು ಪ್ರಾದೇಶಿಕ ಸಮತೋಲನವನ್ನು ಕಾಪಾಡುವ ಪ್ರಯತ್ನ ಮಾಡಲಾಗಿದೆ ಎಂದು ಹೇಳಿದರು.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ

