Friday, April 18, 2025

Latest Posts

ಸಿ.ಟಿ.ರವಿ ಅಶ್ಲೀಲ ಪದ ಬಳಸಿದ್ದರೆ ಸಮರ್ಥಿಸುವುದಿಲ್ಲ. ಅದಕ್ಕೆ ಪ್ರತಿಯಾಗಿ ಸಚಿವೆ ಬೆಂಬಲಿಗರ ಗೂಂಡಾಗಿರಿ ಅತಿರೇಕದ್ದು – HD Kumaraswamy

- Advertisement -

CT Ravi Case HD Kumaraswamy reaction : ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ. ಪ್ರತಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲ ಎಂದ ಮೇಲೆ ವಿಧಾನಮಂಡಲದಲ್ಲಿ ಯಾರ ಭಾವಚಿತ್ರ ಹಿಡಿದರೇನು ಫಲ? ವಿಧಾನ ಪರಿಷತ್ ಸದಸ್ಯರಾದ ಶ್ರೀ @CTRavi_BJP ಮೇಲೆ ಸುವರ್ಣಸೌಧದಲ್ಲಿಯೇ ಹಲ್ಲೆ ಯತ್ನ ನಡೆದಿರುವುದು ಖಂಡನೀಯ.

ಗೌರವಾನ್ವಿತ ಸಚಿವೆ ಬಗ್ಗೆ ಸಿ.ಟಿ.ರವಿ ಅವರು ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಮರ್ಥಿಸುವುದಿಲ್ಲ. ಅದಕ್ಕೆ ಪ್ರತಿಯಾಗಿ ಸಚಿವೆ ವರ್ತಿಸಿದ ರೀತಿ, ಅವರ ಬೆಂಬಲಿಗರ ಗೂಂಡಾಗಿರಿ ಅತಿರೇಖದ್ದು. ಎಲ್ಲದ್ದಕ್ಕೂ ಡಾ.ಅಂಬೇಡ್ಕರ್ ಅವರ ಸಂವಿಧಾನದಡಿಯಲ್ಲಿ ರೂಪಿತವಾದ ಕಾನೂನಿದೆ. ಸಭಾಪತಿಗಳೂ ರೂಲಿಂಗ್ ನೀಡಿದ್ದಾರೆ. ಆ ನಂತರವೂ ನಡೆಯುತ್ತಿರುವ ಘಟನಾವಳಿಗಳು, ಸಭಾಪತಿಗಳನ್ನೇ ನಿಂದಿಸುವ ಕೆಟ್ಟ ನಡವಳಿಕೆಗಳು ಆಘಾತಕಾರಿ. ಸರಕಾರದಲ್ಲಿರುವ ಕೆಲವರು ಈ ಘಟನೆಗೆ ಜ್ವಾಲೆ ಸ್ವರೂಪ ನೀಡಿ ಪ್ರಚೋದಿಸುತ್ತಿರುವುದು ಕಳವಳಕಾರಿ.

ಮೀಸಲಾತಿಗಾಗಿ ಪಂಚಮಸಾಲಿ ಮುಖಂಡರು ಸುವರ್ಣಸೌಧದ ಮುಂದೆ ಪ್ರತಿಭಟಿಸಿದ್ದಕ್ಕೆ ಪೊಲೀಸರಿಂದ ಲಾಠಿಚಾರ್ಜ್ ಮಾಡಿಸಿ ಪೌರುಷ ಮೆರೆದಿತ್ತು @INCKarnataka ಸರಕಾರ. ಅಂದು ಪೊಲೀಸರ ಪ್ರತಾಪ ಹೇಳತೀರದು. ಗೇಟಿನಲ್ಲಿಯೇ ತಡೆದು ಆ ಪಂಚಮಸಾಲಿ ಜನರಿಗೆ ರಕ್ತ ಬರುವಂತೆ ಲಾಠಿ ಬೀಸಿದ ಪೊಲೀಸರೇ.., ಈ ಗೂಂಡಾಗಳು ಸುವರ್ಣಸೌಧದೊಳಕ್ಕೆ ಹೇಗೆ ಬಂದರು? ಅಥವಾ… ಅವರೇ ನಿಮ್ಮ ಕಣ್ತಪ್ಪಿಸಿ ಒಳ ನುಸಳಿದರೋ ಅಥವಾ ಸರಕಾರವೇ ಷಡ್ಯಂತ್ರ ಮಾಡಿ ಒಳ ನುಗ್ಗಿಸಿತೋ? ಇಲ್ಲವೇ ಯಾವುದಾದರೂ ಕಲ್ಲು ಬಂಡೆಯ ಕರಾಮತ್ತು, ಕುಮ್ಮಕ್ಕು ಇದೆಯಾ?

ಸದನದ ಕಾರಿಡಾರಿನಲ್ಲಿಯೇ ಆ ಗೂಂಡಾಗಳು ಶಾಸಕರನ್ನು ಅಟ್ಟಾಡಿಸುತ್ತಾರೆ, ಕೊಲೆಗೆತ್ನಿಸುತ್ತಾರೆ, ಮಾರ್ಷಲ್’ಗಳನ್ನು ಕೆಳಕ್ಕೆ ಕೆಡವಿ ಕ್ರಿಮಿನಲ್ ಪ್ರವೃತ್ತಿ ಮೆರೆಯುತ್ತಾರೆಂದರೆ ಬಂಡೆ ಬೆಂಬಲವಿದೆ ಎಂದೇ ಅರ್ಥ.

ಆ ಗೌರವಾನ್ವಿತ ಸಚಿವೆಯ ಆಪ್ತ ಸಹಾಯಕ ಶಾಸಕರ ಮೇಲೇರಿ ಹೋಗುವ, ಕಾರಿಡಾರಿನ ಕಬ್ಬಿಣದ ಬಾಗಿಲನ್ನೇ ಮುರಿಯಲೆತ್ನಿಸಿ ಹಲ್ಲೆಗೆ ಯತ್ನಿಸುವ ದೃಶ್ಯಗಳು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿವೆ. ರಾಜ್ಯದಲ್ಲಿ ಆಡಳಿತ ಸುರಕ್ಷಿತ ಕೈಗಳಲ್ಲಿ ಇಲ್ಲ ಎನ್ನುವುದಕ್ಕೆ ಆ ದೃಶ್ಯಗಳೇ ಸಾಕ್ಷಿ.

ಸುವರ್ಣಸೌಧಕ್ಕೆ ನುಗ್ಗಿದ ಗೂಂಡಾಗಳನ್ನು ಕೂಡಲೇ ಬಂಧಿಸಿ, ಅವರ ವಿರುದ್ಧ ರೌಡಿಪಟ್ಟಿ ತೆರೆಯಬೇಕು. ಸಮಾಜದ ಶಾಂತಿಗೆ ಬೆದರಿಕೆಯಾಗಿರುವ ಆ ಕಿಡಿಗೇಡಿಗಳನ್ನು ಸುವರ್ಣಸೌಧ, ವಿಧಾನಸೌಧದಿಂದ ಶಾಶ್ವತವಾಗಿ ನಿರ್ಬಂಧಿಸಬೇಕು.

ಪೊಲೀಸರೇ.., ಇಡೀ ಪ್ರಕರಣದ ಬಗ್ಗೆ ನೀವು ಉತ್ತರಿಸಬೇಕಾಗುತ್ತದೆ. ಇಡೀ ರಾತ್ರಿ ಸಿ.ಟಿ.ರವಿ ಅವರನ್ನು ಪೊಲೀಸ್ ಜೀಪಿನಲ್ಲಿ ಸುತ್ತಿಸುತ್ತೀರಿ ಎಂದರೆ, ಇದಕ್ಕೆ ಯಾರ ಫರ್ಮಾನು ಕಾರಣ? ಈ ಗೂಂಡಾಗಳ ಗ್ಯಾಂಗ್ ಲೀಡರ್ ಯಾರು? ನಿಮಗೆ ಎಲ್ಲಾ ಮಾಹಿತಿ ಇರುತ್ತದೆ, ನೀವೂ ಸತ್ಯ ಹೇಳಬೇಕಾಗುತ್ತದೆ. ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಎಕ್ಸ್ ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

- Advertisement -

Latest Posts

Don't Miss